ಮಂಡ್ಯ: ಅಕ್ರಮ ಸ್ಫೋಟಕಗಳನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೀನಪ್ಪನದೊಡ್ಡಿ ಗ್ರಾಮದಲ್ಲಿ ಜರುಗಿದೆ.
ಪೊಲೀಸರು ಐವರನ್ನು ಬಂಧಿಸಿದ್ದು, ಅವರ ಬಳಿ ಇದ್ದ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಸೀನಪ್ಪನದೊಡ್ಡಿ ಗ್ರಾಮದಲ್ಲಿ ಹಲವು ದಿನಗಳಿಂದ ಕ್ವಾರೆಯಲ್ಲಿ ಕಲ್ಲು ಸಿಡಿಸಲು ಗನ್ಪೌಡರ್, ಜಿಲೆಟಿನ್ ಕಡ್ಡಿ, ಡಿಟೋನೇಟರ್ ಸೇರಿ ಇನ್ನಿತರ ಸ್ಪೋಟಕಗಳನ್ನು ಮಾರಾಟ ಮಾಡುವುದರ ಜೊತೆಗೆ ಸ್ಫೋಟಕ್ಕೂ ಬಳಸುತ್ತಿದ್ದಾರೆ ಎಂದು ಪೊಲೀಸರಿಗೆ ಹಲವು ದಿನಗಳಿಂದ ದೂರುತ್ತಿತ್ತು.
ಬುಧವಾರ ಸಂಜೆ ಇದ್ದಕ್ಕಿದ್ದಂತೆ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು, ಸ್ಫೋಟಕಗಳ ಸಮೇತ ಆರೋಪಿಗಳನ್ನು ಹಿಡಿದಿದ್ದಾರೆ. ಈ ಸ್ಥಳದಲ್ಲಿ ಇದ್ದ ಐವರನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಕ್ವಾರೆಯಲ್ಲಿ ಕಲ್ಲು ಸಿಡಿಸಲು ಗನ್ಪೌಡರ್, ಜಿಲೆಟಿನ್ ಕಡ್ಡಿ, ಡಿಟೋನೇಟರ್ ಸೇರಿ ಇನ್ನಿತರ ಸ್ಫೋಟಕಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.