ತುಮಕೂರು: ಕಾಂಗ್ರೆಸ್ ನಲ್ಲಿ ಚುನಾವಣೆಗೂ ಮುನ್ನವೇ ನಾಯಕರುಗಳು ಮುಖ್ಯಮಂತ್ರಿ ಸ್ಥಾನ ಅಲಂಕರಿಸುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಇದನ್ನೂ ಓದಿ: ನಾವು ಜಾರಕಿಹೊಳಿ ಜೊತೆಗೆ ಇದ್ದೇವೆ: ಭೈರತಿ ಬಸವರಾಜ್
ಕೊರಟಗೆರೆಯಲ್ಲಿ ಶುಕ್ರವಾರ ಉಪನೋಂದಣಾಧಿಕಾರಿಗಳ ಕಚೇರಿ ಲೋಕಾರ್ಪಣೆಗೊಳಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಇನ್ನೂ 20 ವರ್ಷ ಕಳೆದರೂ ಅಧಿಕಾರಕ್ಕೆ ಬರುವುದಿಲ್ಲ. ದೇಶದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರೇ ಇಲ್ಲ. ರಾಹುಲ್ ಗಾಂಧಿಯವರ ಹೆಸರು ಹೇಳಿಕೊಂಡು ಚುನಾವಣೆಗೆ ಹೋದರೆ ಕೇವಲ ನಾಲ್ಕು ವೋಟೂ ಬೀಳಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆಗೂ ಮುನ್ನವೇ ಮುಖ್ಯಮಂತ್ರಿ ಕನಸು ಕಾಣಲಾಗುತ್ತಿದೆ. ಇದು ಕಾಂಗ್ರೆಸ್ ನಾಯಕರ ತಿರುಕನ ಕನಸು ಎನ್ನದೇ ಮತ್ತೇನು ಹೇಳಬೇಕು ಎಂದು ಟೀಕಿಸಿದ್ದಾರೆ.
ಚುನಾವಣೆಗೆ ಇನ್ನು ಎರಡು ವರ್ಷ ಬಾಕಿ ಇದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ 6 ಜನ ಟವಲ್ ಹಾಕಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಎಸ್.ಆರ್.ಪಾಟೀಲ್ ಸೇರಿದಂತೆ ಆರು ಮಂದಿ ನಾಯಕರು ಚುನಾವಣೆಗೆ ಮುನ್ನವೇ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ. ಈ ತಿರುಕನ ಕನಸು ಯಾವುದೇ ಕಾರಣಕ್ಕೂ ಸಫಲವಾಗುವುದಿಲ್ಲ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಸದೃಢ ನಾಯಕರಿಲ್ಲ. ಹಾಗಾಗಿ ಇನ್ನು 20 ವರ್ಷ ರಾಜ್ಯ ಮತ್ತು ಕೇಂದ್ರದಲ್ಲಿ ಯಾರೇ ಬಂದರೂ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.