ಚಿತ್ರದುರ್ಗ: ಕೈ ನಾಯಕರು ಶಿವಮೊಗ್ಗ ಜಿಲ್ಲೆಯನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಶ್ರೀ ರಾಮುಲು ವಾಗ್ದಾಳಿ ನಡೆಸಿದರು.
ಚಿತ್ರದುರ್ಗ ತಾಲೂಕಿನ ಬೆಳಗಟ್ಟ ಗ್ರಾಮದಲ್ಲಿ ನಡೆಯುತ್ತಿರುವ ಕರಿ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಬಜೆಟ್ ಸೇರಿದಂತೆ ಯಾವುದೇ ವಿಚಾರದಲ್ಲೂ ಕಾಂಗ್ರೆಸ್ ನಾಯಕರು ಚರ್ಚೆಗೆ ಬರಲಿಲ್ಲ. ಈಗ ಭದ್ರಾವತಿಯಲ್ಲಿ ಪಾದಯಾತ್ರೆ ಹಾಗೂ ಧರಣಿ ಮಾಡಲು ಮುಂದಾಗಿದ್ದಾರೆ. ಆದರೆ ಕಾಂಗ್ರೆಸ್ ನಾಯಕರ ಆಟ ಈಗ ನಡೆಯುವುದಿಲ್ಲ ಎಂದು ಕಿಡಿಕಾರಿದರು.
ಭದ್ರಾವತಿ ಶಾಸಕ ಸಂಗಮೇಶ ಪುತ್ರನ ವಿರುದ್ಧ ಕಾನೂನು ಕ್ರಮದ ವಿಚಾರದಲ್ಲಿ ಬಿಜೆಪಿ ಸರ್ಕಾರ ಸೇಡಿನ ರಾಜಕಾರಣ ಮಾಡಿಲ್ಲ. ಆದರೆ ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಇತ್ತ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಶ್ರೀರಾಮನ ಹೆಸರು ಸಹಿಸುವುದಿಲ್ಲ ಅಂತಾರೆ. ಕಾಂಗ್ರೆಸ್ ನಾಯಕರು ಬೌದ್ಧಿಕವಾಗಿ, ನೈತಿಕವಾಗಿ ದಿವಾಳಿಯಾಗಿದ್ದಾರೆ ಎಂದು ಲೇವಡಿ ಮಾಡಿದರು.
ಸಿಡಿ ಪ್ರಕರಣದ ಕುರಿತು ಮಾತನಾಡಿದ ಅವರು, ಸಿಡಿ ಪ್ರಕರಣದಲ್ಲಿ ಮಹಾನ್ ವ್ಯಕ್ತಿ ಯಾರು ಎಂಬುದು ನನಗೆ ಗೊತ್ತಿಲ್ಲ. ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗಿ ಹೊರಬರುತ್ತಾರೆ ಎಂಬ ವಿಶ್ವಾಸವಿದೆ. ಜೊತೆಗೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಮೆರೆಯುತ್ತಿರುವುದು ಸರಿಯಲ್ಲ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕನ್ನಡಿಗರನ್ನು ಕೆಣಕುತಿದ್ದಾರೆ. ನಾವು ಒಂದಿಂಚೂ ಜಾಗವನ್ನು ಅವರಿಗೆ ಬಿಟ್ಟುಕೊಡುವುದಿಲ್ಲ. ಗಡಿಯಲ್ಲಿ ಕರ್ನಾಟಕದ ರಾಗಿ ಕಾಳಿನಷ್ಟು ಜಾಗ ಸಹ ಬಿಟ್ಟು ಕೊಡುವ ಮಾತಿಲ್ಲ ಎಂದರು.