ಹಾಸನ: ಪಕ್ಷ ಗಟ್ಟಿಯಾಗಿದೆ. ಆದರೆ ಒಮ್ಮತದ ಅಭಿಪ್ರಾಯ ಇಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ನಾಯಕರಲ್ಲಿ ಒಗ್ಗಟ್ಟಿಲ್ಲ ಎಂಬುದನ್ನು ಸಂಸದ ಡಿ.ಕೆ ಸುರೇಶ್ ಒಪ್ಪಿಕೊಂಡಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿಯೇ ವೇದಿಕೆಯಲ್ಲಿರುವ ನಾಯಕರಲ್ಲೇ ಒಗ್ಗಟ್ಟಿಲ್ಲ. ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದೆ. ಆದರೆ ಒಮ್ಮತದ ಅಭಿಪ್ರಾಯ ಇಲ್ಲ. ಆದರೂ ಕೂಡ ನಮಗೆ ವಿಶ್ವಾಸವಿದೆ. ಪಕ್ಷವನ್ನು ತಳಮಟ್ಟದಲ್ಲಿ ಕಟ್ಟುವುದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ನಮಗೆ ಗೆಲ್ಲೋಕೆ ಅವಕಾಶ ಇರಲಿಲ್ಲ. ದೇವೇಗೌಡರಿಗೆ ರಾಷ್ಟ್ರೀಯ ನಾಯಕರು ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ಸಿನಲ್ಲಿ ಯಾವುದೇ ಗೊಂದಲ ಇಲ್ಲ. ಕಾರ್ಯಕರ್ತರಲ್ಲಿ ಕೂಡ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.
ಭಾವನಾತ್ಮಕ ವಿಚಾರ ಇಟ್ಟುಕೊಂಡು ಬಿಜೆಪಿ ರಾಜ್ಯದ ಜನರನ್ನು ಮರಳು ಮಾಡುತ್ತಿದೆ. ತಮ್ಮ ನಾಯಕರೆಲ್ಲರನ್ನೂ ಒಗ್ಗೂಡಿಸುವ ಕೆಲಸ ಡಿಕೆಶಿಗೆ ಸವಾಲಾಗಿದೆ. ಡಿಕೆಶಿಗೆ ಎಲ್ಲರನ್ನೂ ಒಗ್ಗೂಡಿಸುವ ಸವಾಲು ಎದುರಾಗಿದೆ. ಎಲ್ಲರೂ ಒಗ್ಗಟ್ಟಾದ್ರೆ ರಾಜ್ಯದಲ್ಲಿ ಕಾಂಗ್ರೆಸ್ 130 ಸ್ಥಾನ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.