ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಹುಟ್ಟುಹಬ್ಬವನ್ನ ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿರೋ ಜಾವರಿನ್ ರೆಸಾರ್ಟ್ನಲ್ಲಿ ಜೆಡಿಎಸ್ ಕಾರ್ಯಕರ್ತರೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ.
ಸೋಮವಾರ ರಾತ್ರಿಯೇ ಜಿಲ್ಲೆಗೆ ಆಗಮಿಸಿದ್ದ ಕುಮಾರಸ್ವಾಮಿ ಅವರು ಎರಡು ದಿನಗಳ ಕಾಲ ರೆಸಾರ್ಟಿನಲ್ಲೇ ಕಾಲ ಕಳೆದಿದ್ದಾರೆ. ಕುಮಾರಸ್ವಾಮಿ ಅವರು ಜಿಲ್ಲೆಗೆ ಬಂದಿರೋ ವಿಷಯ ಜಿಲ್ಲೆಯ ಬಹುತೇಕ ಜೆಡಿಎಸ್ ಕಾರ್ಯಕರ್ತರಗೆ ಗೊತ್ತಿರಲಿಲ್ಲ. ಎರಡು ದಿನಗಳ ಕಾಲ ರೆಸಾರ್ಟ್ ನಲ್ಲೇ ವಿಶ್ರಾಂತಿ ಪಡೆದ ಮಾಜಿ ಸಿಎಂ ಇಂದು ಸರಳವಾಗಿ ಜೆಡಿಎಸ್ ಕಾರ್ಯಕರ್ತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಇಂದು ಅವರ ಹುಟ್ಟುಹಬ್ಬದ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತ ಸಿರಾಜ್ ಹಾಗೂ ಇತರೆ ಕಾರ್ಯಕರ್ತರೊಂದಿಗೆ ಸರಳವಾಗಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ. ಈ ವೇಳೆ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್ ಜೊತೆಗಿದ್ದರು. ಎರಡು ದಿನಗಳ ಕಾಲ ಜಿಲ್ಲೆಯಲ್ಲಿದ್ದರೂ ಬಹುತೇಕ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಮಾಹಿತಿ ಇರಲಿಲ್ಲ ಎಂದು ತಿಳಿದು ಬಂದಿದೆ.
ಇಂದು ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತರು ನಗರದ ತಾಲೂಕು ಕಚೇರಿ ಆವರಣದಲ್ಲಿರೋ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ 10ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ರಕ್ತದಾನ ಮಾಡಿದ್ದಾರೆ.