ಬೆಂಗಳೂರು: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ನಾಲಿಗೆ ಬಿಗಿ ಹಿಡಿದು ಮಾತನಾಡಲಿ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಅವರು ಎಚ್ಚರಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕುಡಿದು ಗಾಡಿ ಚಲಾಯಿಸಿ ಪ್ರಾಣ ಬಲಿ ಪಡೆಯುವುದು ಸಿ.ಟಿ ರವಿ ಹಾಗೂ ಬಿಜೆಪಿಯವರ ಸಂಸ್ಕೃತಿ ಎಂದು ಕಿಡಿಕಾರಿದರು.
ಕಾಂಗ್ರೆಸ್ ಪಕ್ಷ ಬಡವರಿಗಾಗಿ ಹಸಿವು ನೀಗಿಸಲು ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಮಾಡಲಾಗಿದೆ. ಆದರೆ ಸಿ.ಟಿ. ರವಿ ಅವರು ಇಂದಿರಾಗಾಂಧಿ ಅವರ ಹೆಸರಲ್ಲಿ ಹುಕ್ಕಾ ಬಾರ್ ಬೇಕಾದರೆ ಮಾಡಿಕೊಳ್ಳಲಿ ಎಂದು ಆಡಿರುವ ಮಾತುಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಆಚಾರವಿಲ್ಲದ ನಾಲಿಗೆ ಏನುಬೇಕಾದರೂ ಮಾತನಾಡುತ್ತದೆ. ಇಂದಿರಾ ಗಾಂಧಿ ಅವರ ಹೆಸರನ್ನು ಹೇಳುವ ಯೋಗ್ಯತೆ ಬಿಜೆಪಿ ನಾಯಕರಿಗಿಲ್ಲ ಎಂದರು.
ಇದೇ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಮಾತನಾಡಿ, ಸಿ.ಟಿ ರವಿ ಅವರ ಮಾತುಗಳನ್ನು ಕೇಳಿದರೆ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವಂತೆ ಕಾಣುತ್ತಿದೆ. ಅವರ ಭಾಷೆ ಬಳಕೆ ಇದಕ್ಕೆ ಸಾಕ್ಷಿ. ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಬಗ್ಗೆ ಅವರ ಮಾತುಗಳು ಅವರ ಆಚಾರ ವಿಚಾರವನ್ನು ತಿಳಿಸುತ್ತದೆ ಎಂದರು. ಇದನ್ನೂ ಓದಿ: ಸುಲಭ್ ಶೌಚಾಲಯ ಯೋಜನೆಗೆ ಮೋದಿಯ ಹೆಸರನ್ನು ಇಡಲಿ: ಹರಿಪ್ರಸಾದ್ ವ್ಯಂಗ್ಯ
ಸಿ.ಟಿ.ರವಿ ಹೇಳಿದ್ದೇನು?: ಕಾಂಗ್ರೆಸ್ಸಿನವರು ಇಂದಿರಾ ಕ್ಯಾಂಟೀನ್ ತೆರೆದಿರೋದು ಅವರ ಎಟಿಎಂಗಳನ್ನು ತುಂಬಿಸಿಕೊಳ್ಳಲೇ ಹೊರತು, ಇಂದಿರಾ ಗಾಂಧಿ ಮೇಲಿನ ಪ್ರೀತಿಯಿಂದಲ್ಲ. ಕಾಂಗ್ರೆಸ್ನವರು ಬೇಕಾದ್ರೆ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಿ. ಬೇಕಾದ್ರೆ ಬಾರ್ ತೆರೆಯಲಿ, ನೆಹರು ಹುಕ್ಕಾ ಬಾರ್ ಎಂಬ ಹೆಸರಲ್ಲಿ ತೆರೆಯಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮಾಡಬೇಕು ಅಂತಾ ಪ್ರಸ್ತಾಪಿಸಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಇದನ್ನೂ ಓದಿ: ಮೂತ್ರ ವಿಸರ್ಜನೆ ಮಾಡ್ತಿದ್ದವರಿಗೆ ಶಾಸಕ ಸಿಟಿ ರವಿ ಕಾರು ಡಿಕ್ಕಿ- ಇಬ್ಬರ ದುರ್ಮರಣ