– ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯ
ನವದೆಹಲಿ: ಕೇಂದ್ರ ಸರ್ಕಾರ ಮೂರು ಹೊಸ ಕೃಷಿ ಕಾಯ್ದೆಗಳನ್ನ ಹಿಂಪಡೆಯುವಂತೆ ಆಗ್ರಹಿಸಲು ವಿಪಕ್ಷ ನಾಯಕರ ನಿಯೋಗ ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನ ಭೇಟಿಯಾಗಲಿದೆ.
ಕೊರೊನಾ ಹಿನ್ನೆಲೆ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ, ಸಿಪಿಐ(ಎಂ) ಮಹಾ ಸಚಿವ ಸೀತಾರಾಮ್ ಯೆಚೂರಿ ನೇತೃತ್ವದ ಐವರು ನಾಯಕ ನಿಯೋಗ ಬುಧವಾರ ಸಂಜೆ 5 ಗಂಟೆಗೆ ರಾಷ್ಟ್ರಪತಿಗಳ ಭೇಟಿಗೆ ತೆರಳಲಿದೆ. ಈ ವೇಳೆ ಮೂರು ಕೃಷಿ ಕಾಯ್ದೆಗಳನ್ನ ಹಿಂಪಡೆಯುವಂತೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಿದ್ದಾರೆ.
ಕಳೆದ 13 ದಿನಗಳಿಂದ ಸಿಂಘು ಬಾರ್ಡರ್ ನಲ್ಲಿ ರೈತರು ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಧರಣಿಗೆ ಕುಳಿತಿದ್ದಾರೆ. ದೆಹಲಿ ಪ್ರವೇಶಕ್ಕೆ ಪೊಲೀಸರು ನಿರಾಕರಿಸಿದ ಹಿನ್ನೆಲೆ ರೈತರು ಹೆದ್ದಾರಿಯ ಪಕ್ಕದಲ್ಲಿಯೇ ಬಿಡಾರ ಹೂಡಿಕೊಂಡು ವಾಸ್ತವ್ಯ ಹೂಡಿದ್ದಾರೆ. ಈಗಾಗಲೇ ಸರ್ಕಾರ ಪ್ರತಿಭಟನಾ ನಿರತ ರೈತರ ಮುಖಂಡರ ಜೊತೆ ಐದು ಸುತ್ತಿನ ಮಾತುಕತೆ ನಡೆಸಿದ್ದು ವಿಫಲವಾಗಿದೆ. ನಾಳೆ ಆರನೇ ಸುತ್ತಿನ ಮಾತುಕತೆ ನಡೆಯಲಿದೆ.