ತಿರುವನಂತಪುರಂ: ಕೇರಳ ವಿಮಾನ ದುರಂತದ ವೇಳೆ ರಕ್ಷಣಾ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದ 22 ಅಧಿಕಾರಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಮಲಪ್ಪುರಂ ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಕೊರೊನಾ ನಡುವೆಯೂ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಭಾರತಕ್ಕೆ ಕರೆತರುತ್ತಿತ್ತು. ಕೇಂದ್ರ ಸರ್ಕಾರದ ವಂದೇ ಭಾರತ್ ಮಿಷನ್ ಅಡಿಯಲ್ಲಿ ದುಬೈನಿಂದ 184 ಪ್ರಯಾಣಿಕರನ್ನು ಕೇರಳಗೆ ಬಂದಿದ್ದರು. ಆದರೆ ಪ್ರತಿಕೂಲ ಹವಾಮಾನದ ಸಮಸ್ಯೆಯಿಂದ ವಿಮಾನ 35 ಅಡಿ ಕಂದಕಕ್ಕೆ ಜಾರಿ ಬಿದ್ದಿತ್ತು. ಪರಿಣಾಮ ಇಬ್ಬರು ಪೈಲಟ್ಗಳು ಸೇರಿ 18 ಜನರು ಸಾವನ್ನಪ್ಪಿದ್ದರು.
ಕಂದಕಕ್ಕೆ ಬಿದ್ದಿದ್ದ ವಿಮಾನದಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರು ಮತ್ತು ಸ್ಥಳದಲ್ಲಿದ್ದ ಹಲವು ಅಧಿಕಾರಿಗಳು ಬಂದು ರಕ್ಷಣೆ ಮಾಡಿದ್ದರು. ಇದಾದ ನಂತರ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದ್ದ ಎಲ್ಲ ಅಧಿಕಾರಿಗಳನ್ನು ಕ್ವಾರಂಟೈನ್ ಮಾಡಲಾಗಿತ್ತು. ಈಗ ಇವರ ಪೈಕಿ 22 ಮಂದಿ ಅಧಿಕಾರಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ಈ ಎಲ್ಲ ಅಧಿಕಾರಿಗಳು 4 ಗಂಟೆಗಳ ಕಾಲ ರಕ್ಷಣಾ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.
ಅಗಸ್ಟ್ 7ರಂದು ಸಂಜೆ 7.45ರ ಸುಮಾರಿಗೆ ದುಬೈನಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೋಯಿಕ್ಕೋಡ್ನ ಕರಿಪುರದಲ್ಲಿ ಲ್ಯಾಂಡಿಗೆ ವೇಳೆ ರನ್ ವೇಯಲ್ಲಿ ಜಾರಿ ದುರಂತಕ್ಕೀಡಾಗಿತ್ತು. ಲ್ಯಾಂಡಿಂಗ್ ವೇಳೆ ಬೆಂಕಿ ಹೊತ್ತಿಕೊಂಡಿಲ್ಲ. ವಿಮಾನದಲ್ಲಿ 184 ಮಂದಿ ಪ್ರಯಾಣಿಕರಿದ್ದರು. 10 ಮಂದಿ ಮಕ್ಕಳು, ಇಬ್ಬರು ಪೈಲಟ್ಗಳು ಹಾಗೂ ಐವರು ಕ್ಯಾಬಿನ್ ಸಿಬ್ಬಂದಿ ಇದ್ದರು.
ದುಬೈಯಿಂದ 184 ಪ್ರಯಾಣಿಕರನ್ನು ಕರೆತರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ಪೈಲಟ್ ದೀಪಕ್ ವಸಂತ ಸಾಠೆ ಎರಡು ಬಾರಿ ವಿಮಾನ ನಿಲ್ದಾಣಕ್ಕೆ ಸುತ್ತು ಹೊಡೆಸಿದ್ದರು. ಆದರೆ ಪ್ರತಿಕೂಲ ಹವಾಮಾನದ ಸಮಸ್ಯೆಯ ಮಧ್ಯೆಯೂ ವಿಮಾನವನ್ನು ಟೇಬಲ್ ಟಾಪ್ ರನ್ವೇಯಲ್ಲಿ ಇಳಿಸಿದರೂ ಅದು 35 ಅಡಿ ಕಂದಕಕ್ಕೆ ಜಾರಿ ಬಿದ್ದು ಗೋಡೆಗೆ ಡಿಕ್ಕಿ ಹೊಡೆದು ಇಬ್ಭಾಗವಾಗಿತ್ತು. ಘಟನೆಯಲ್ಲಿ ಇಬ್ಬರು ಪೈಲಟ್ ಗಳು ಸೇರಿ 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದರು. ಜೊತೆಗೆ 150ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು.