ಮಡಿಕೇರಿ: ಮಳೆಗಾಲ ಆರಂಭವಾಗಿದ್ದು, ಕೊಡಗು ಜಿಲ್ಲೆಯಲ್ಲಿ ಈ ಬಾರಿಯೂ 77 ಗ್ರಾಮಗಳಿಗೆ ಪ್ರವಾಹ ಮತ್ತು ಭೂಕುಸಿತದ ಭೀತಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಆತಂಕ ವ್ಯಕ್ತಪಡಿಸಿದ್ದಾರೆ.
ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಳೆ ಸಂಬಂಧಿತ ಮುಂಜಾಗ್ರತಾ ಕ್ರಮಗಳ ಕುರಿತು ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 77 ಗ್ರಾಮಗಳು ಪ್ರವಾಹ ಮತ್ತು ಭೂಕುಸಿತದಿಂದ ಭಾದಿತವಾಗುವ ಸಾಧ್ಯತೆ ಇದ್ದು, 2,878 ಮನೆಗಳಿಗೆ ಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಅವರೆಲ್ಲರನ್ನೂ ಸ್ಥಳಾಂತರ ಮಾಡಬೇಕಾದ ಅಗತ್ಯವಿದೆ ಎಂದು ತಿಳಿಸಿದರು.
ಕೋವಿಡ್ ಸೋಂಕು ಇರುವುದರಿಂದ ಈ ಬಾರಿ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೇ ಕಾಳಜಿ ಕೇಂದ್ರಗಳನ್ನು ತೆರೆಯಲಾಗುವುದು. ಅಲ್ಲದೆ ಅವರನ್ನು ಸ್ಥಳಾಂತರ ಮಾಡುವ ಮೊದಲು ಸ್ವ್ಯಾಬ್ ಟೆಸ್ಟ್ ಮಾಡಿ ಬಳಿಕ ಸ್ಥಳಾಂತರ ಮಾಡಲಾಗುವುದು ಎಂದಿದ್ದಾರೆ. ಒಟ್ಟಿನಲ್ಲಿ ಕೊಡಗಿನಲ್ಲಿ ಮಳೆಗಾಲಕ್ಕೂ ಮೊದಲೇ ಅಪಾಯ ಎದುರಾಗುವ ಗ್ರಾಮಗಳ ಬಗ್ಗೆ ಮಾಹಿತಿ ಕಲೆಹಾಕಿರುವ ಅಧಿಕಾರಿಗಳು, ಕೊಡಗಿಗೆ ಈ ಬಾರಿಯೂ ಅಪಾಯ ತಪ್ಪಿದ್ದಲ್ಲ ಎಂಬ ಸುಳಿವು ನೀಡಿದ್ದಾರೆ.