ಮಡಿಕೇರಿ: ಪುಂಡಾಟ ನಡೆಸುತ್ತಿದ್ದ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ 6 ಸಾಕಾನೆಗಳನ್ನು ಬಳಸಿ ಯಶಸ್ವಿಯಾಗಿ ಕಾಡಾನೆಯನ್ನು ಸೆರೆಹಿಡಿದಿದ್ದಾರೆ.
ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲೂಕಿನ ಗೋಣಿಕೋಪ್ಪ ಸಮೀಪದ ಕಳತ್ಮಾಡು ಹಾಗೂ ಅಮ್ಮತ್ತಿ ಸುತ್ತಮುತ್ತ ಪ್ರದೇಶದಲ್ಲಿ ಕಳೆದ ಒಂದು ವರ್ಷದಿಂದ ಕಾಡಾನೆ ಹಾವಳಿ ಹೆಚ್ಚಾಗಿತ್ತು. ಕಾಡಾನೆಯ ಉಪಟಳಕ್ಕೆ ಬೇಸತ್ತಿದ್ದ ಜನರು ಆನೆಗಳನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.
ಕಾಡಾನೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಈ ಕಾರ್ಯಾಚರಣೆಯಲ್ಲಿ 40ಕ್ಕೂ ಅಧಿಕ ಸಿಬ್ಬಂದಿ ಭಾಗಿಯಾಗಿದ್ದು, 6 ಸಾಕಾನೆಗಳ ಬಳಸಿಕೊಂಡು ಕಳತ್ಮಾಡುವಿನ ಕಾಫಿ ತೋಟದಲ್ಲಿ ಸುಮಾರು 35 ವರ್ಷದ ಗಂಡಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಪರಿಶ್ರಮ ಪಟ್ಟು ಕೊನೆಗೂ ಕಾಡಾನೆಯನ್ನು ಸೆರೆಹಿಡಿಯಲಾಗಿದೆ.
ಪಶುವೈದ್ಯ ಡಾ.ಮುಜೀಬ್ ಮಾರ್ಗದರ್ಶನದಲ್ಲಿ ಹಾಗೂ ಮಡಿಕೇರಿ, ವಿರಾಜಪೇಟೆ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ, ಕಾರ್ಯಾಚರಣೆ ನಡೆಸಲಾಗಿದೆ. ಮತ್ತಿಗೋಡು ಅನೆ ಶಿಬಿರದಿಂದ ಸಾಕಾನೆ ಅಭಿಮನ್ಯು ನೇತ್ರತ್ವದಲ್ಲಿ , ಹರ್ಷ, ಅಜಯ, ಧನಂಜಯ, ವಿಕ್ರಮ, ಸಾಕಾನೆಗಳು, ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ಶ್ರಮಪಟ್ಟಿವೆ.