ಮಡಿಕೇರಿ : ಕೊಡಗು ಜಿಲ್ಲೆಗೆ ಮುಂಗಾರು ಎಂಟ್ರಿ ಕೊಟ್ಟಿದ್ದು, ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗುತ್ತಿದೆ. ಬೆಳಗ್ಗೆಯಿಂದಲೇ ಜಿಲ್ಲೆಯ ಭಾಗಮಂಡಲ, ತಲಕಾವೇರಿ ನಾಪೋಕ್ಲು, ಮಡಿಕೇರಿ ಸೇರಿದಂತೆ ಬಹುತೇಕ ಭಾಗಗಳಲ್ಲಿ ದಿನವಿಡೀ ಬಿಟ್ಟು ಬಿಟ್ಟು ಸುರಿಯುತ್ತಿದೆ.
ತೀವ್ರ ಗಾಳಿ ಬೀಸುತ್ತಿದ್ದು ಜೊತೆಗೆ ಸಂಪೂರ್ಣ ಮಂಜಿನಿಂದ ಕೂಡಿದೆ. ಹೀಗಾಗಿ ಮಡಿಕೇರಿ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಶೀತಗಾಳಿಯಿಂದ ಜನರು ತತ್ತರಿಸುವಂತೆ ಮಾಡಿದೆ. ಇನ್ನು ಉತ್ತಮ ಮಳೆ ಸುರಿಯುತ್ತಿರುವ ಪರಿಣಾಮ ಗ್ರಾಮೀಣ ಭಾಗಗಳಲ್ಲಿ ರೈತ ವರ್ಗ ಹರ್ಷಗೊಂಡಿದ್ದು, ಬಿತ್ತನೆ ಕಾರ್ಯಕ್ಕೆ ಭೂಮಿಯನ್ನು ಹದಗೊಳಿಸುತ್ತಿದೆ.
ಹಲವು ರೈತರು ಬಿತ್ತನೆ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಕೊಡಗಿನಲ್ಲಿ ಕಳೆದ ಎರಡು ದಿನಗಳಿಂದ ಬೀಳುತ್ತಿರುವ ಉತ್ತಮ ಮಳೆ ಇಂದು ಮತ್ತಷ್ಟು ತೀವ್ರತೆ ಪಡೆದುಕೊಳ್ಳುವ ಸಾಧ್ಯತೆ ಇದೆ. ಕಳೆದ ಎರಡು ವರ್ಷಗಳ ಪ್ರವಾಹ ಮತ್ತು ಭೂ ಕುಸಿತದ ಆತಂಕ ಜನರಲ್ಲಿ ಮನೆ ಮಾಡಿದೆ.