– ಜಿಲ್ಲೆಯ ಜನರಲ್ಲಿ ಆತಂಕ
– 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆ ಮತ್ತೆ ಅಬ್ಬರಿಸುತ್ತಿದೆ. ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಗುರುವಾರ ಸಂಜೆಯಿಂದಲೂ ಜಿಲ್ಲೆಯಾದ್ಯಂತ ಧಾರಕಾರ ಮಳೆ ಸುರಿಯುತ್ತಿದ್ದು, ಮತ್ತೆ ಪ್ರವಾಹ ಮತ್ತು ಭೂಕುಸಿತ ಆಗುವ ಆತಂಕ ಸೃಷ್ಟಿಯಾಗಿದೆ. ತಲಕಾವೇರಿ, ಬಾಗಮಂಡಲ ಸುತ್ತಮುತ್ತ ನಿನ್ನೆ ಸಂಜೆಯಿಂದಲೂ ಎಡಬಿಡದೆ ಭಾರೀ ಮಳೆ ಸುರಿಯುತ್ತಿದೆ. ಪರಿಣಾಮವಾಗಿ ಬಾಗಮಂಡಲ ತ್ರಿವೇಣಿ ಸಂಗಮದಲ್ಲಿ ಕಾವೇರಿ ನದಿ ನೀರಿನ ಪ್ರಮಾಣದಲ್ಲಿ ಮೂರು ಅಡಿಯಷ್ಟು ಏರಿಕೆಯಾಗಿದೆ.
ಮಳೆ ಹೀಗೆ ಮುಂದುವರಿದಲ್ಲಿ ಮತ್ತೆ ಪ್ರವಾಹ ಸೃಷ್ಟಿಯಾಗುವ ಆತಂಕವಿದೆ. ಅಲ್ಲದೆ ತಲಕಾವೇರಿ ಸಮೀಪದ ಕೋಳಿಕಾಡು, ಚೇರಂಗಾಲ ಮತ್ತು ಕೋರಂಗಾಲ ಗ್ರಾಮಗಳಲ್ಲಿ ಭೂಕುಸಿತವಾಗುವ ಸಾಧ್ಯತೆ ಇದ್ದು, ಆಗಸ್ಟ್ ತಿಂಗಳಲ್ಲಿ ಜನರನ್ನು ಸ್ಥಳಾಂತರ ಮಾಡಿದಂತೆ ಈಗಲೂ ಸ್ಥಳಾಂತರಿಸುವ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳಿದ್ದಾರೆ.