– 77 ಗ್ರಾಮಗಳ ಗ್ರಾಮಸ್ಥರ ಸ್ಥಳಾಂತರಕ್ಕೆ ಮುಂದಾದ ಜಿಲ್ಲಾಡಳಿತ
ಕೊಡಗು: ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲ್ಲೂ ಮಳೆ ಅರ್ಭಟ ಹೆಚ್ಚಾಗಿದೆ. ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ನಿಧಾನವಾಗಿ ಏರಿಕೆಯಾಗುತ್ತಿದೆ.
ಕೊಡಗು- ಕೇರಳ ಗಡಿಭಾಗ ಇದಾಗಿದ್ದು ನಿರಂತರ ಮಳೆಯಾಗುತ್ತಿದೆ. ಪಕ್ಕದ ಭಾಗಮಂಡಲದ ನದಿಪಾತ್ರದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಜಿಲ್ಲೆಯ ಇತರ ಭಾಗಗಳಲ್ಲಿ ಮಳೆಯ ಅರ್ಭಟ ಹೆಚ್ಚಾಗುತ್ತಿದೆ. ನಿರಂತರ ಮಳೆ ಸುರಿಯುತ್ತಿರುವುದರಿಂದ ಕೆಲವು ಭಾಗಗಳಲ್ಲಿ ಸಣ್ಣ ಪುಟ್ಟ ಬರೆ ಕುಸಿದ ಘಟನೆಗಳು ನಡೆದಿದೆ. ಮಡಿಕೇರಿ ನಗರದ ಆಂಜನೇಯ ದೇವಸ್ಥಾನದ ಬಳಿ ಚೇತನ್ ಅವರಿಗೆ ಸೇರಿದ ಜಾಗದಲ್ಲಿ ಕಳೇದ ರಾತ್ರಿ ಸಣ್ಣ ಪ್ರಮಾಣದಲ್ಲಿ ಬರೆ ಜರಿದು ದನದ ಕೊಟ್ಟಿಗೆ ಸಂಪೂರ್ಣವಾಗಿ ಹಾನಿಯಾಗಿದೆ. ಮಡಿಕೇರಿ ಹಾಗೂ ಚೆಟ್ಟಳ್ಳಿ ಮಾರ್ಗದ ಕಡಗದಾಳು ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿ ತೆರೆವುಗೊಳಿಸಿ ರಸ್ತೆ ಸಂಪರ್ಕಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಸ್ಥಳಾಂತರಗೊಳ್ಳುತ್ತಿರುವ ಜನರಿಗೆ ಲಸಿಕೆ:
ಈ ಬಾರಿಯೂ ಪ್ರವಾಹ ಪರಿಸ್ಥಿತಿ ಎದುರಾದರೆ, ಮತ್ತೊಂದೆಡೆ ಭೂಕುಸಿತದಂತ ಘಟನೆಗಳು ನಡೆಯಬಹುದು. ಹೀಗಾಗಿ ಜಿಲ್ಲಾಡಳಿತ ಪ್ರವಾಹ ಮತ್ತು ಭೂಕುಸಿತ ಎದುರಾಗುವಂತಹ ಪ್ರದೇಶಗಳ ಜನರನ್ನು ಸ್ಥಳಾಂತರ ಮಾಡುವುದಕ್ಕೆ ನಿರ್ಧರಿಸಿದೆ. ಈ ಬಾರಿ ಜಿಲ್ಲೆಯಲ್ಲಿ 77 ಗ್ರಾಮಗಳು ಪ್ರವಾಹ ಮತ್ತು ಭೂಕುಸಿತಕ್ಕೆ ನಲುಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇಷ್ಟು ಗ್ರಾಮಗಳ 2,800 ಮನೆಗಳಿಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಅಂದಾಜಿಸಿದೆ. ಹೀಗಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು ಎಂದು ಅಷ್ಟು ಕುಟುಂಬಗಳಿಗೂ ಜಿಲ್ಲಾಡಳಿತ ಈಗಾಗಲೇ ನೊಟೀಸ್ ಜಾರಿ ಮಾಡಿದೆ.
ದೂರದ ಸ್ಥಳಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದಲ್ಲಿ ಅಲ್ಲಿಗೆ ಜನರು ಹೋಗಲು ಹಿಂದೇಟು ಹಾಕುತ್ತಾರೆ. ಜೊತೆಗೆ ಸ್ಥಳಾಂತರದ ಕೆಲಸವೂ ಕಷ್ಟಕರವಾಗುತ್ತದೆ. ಈ ಎಲ್ಲಾ ದೃಷ್ಟಿಯಿಂದ ಆಯಾ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗುವುದು ಎಂದು ಜಿಲ್ಲಾಡಳಿತ ಹೇಳಿದೆ.
ಕೆಲವು ಕಡೆಗಳಲ್ಲಿ ಜನರು ಸ್ಥಳಾಂತರಗೊಳ್ಳುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಆದರೆ ಇದು ಒಳ್ಳೆಯದಲ್ಲ, ಒಂದು ವೇಳೆ ಪ್ರವಾಹ ಅಥವಾ ಭೂಕುಸಿತದಂತಹ ಘಟನೆಗಳು ನಡೆದರೆ, ತಕ್ಷಣವೇ ಎಲ್ಲರನ್ನೂ ರಕ್ಷಣೆ ಮಾಡುವ ಕೆಲಸ ಕಷ್ಟವಾಗುತ್ತದೆ. ಆದ್ದರಿಂದ ಜನರು ಸ್ಥಳಾಂತರಗೊಳ್ಳುವುದು ಉತ್ತಮ ಎಂದಿದ್ದಾರೆ. ಕಳೆದ ಮೂರು ವರ್ಷಗಳಿಂದಲೂ ಪ್ರವಾಹದಂತಹ ಸಂದರ್ಭದಲ್ಲಿ ಎಷ್ಟೋ ಜನರು ತಮ್ಮ ಸಂಬಂಧಿಕರ ಮನೆಗಳಿಗೆ ತೆರಳುತ್ತಿದ್ದರು. ಆದರೆ ಈ ಬಾರಿ ಕೋವಿಡ್ ಇರುವುದರಿಂದ ಜನರು ಸಂಬಂಧಿಕರ ಮನೆಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸ್ಥಳಾಂತರಗೊಳ್ಳಬೇಕಾಗಿರುವ ಕುಟುಂಬಗಳ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೂಡಲೇ ವ್ಯಾಕ್ಸಿನ್ ಹಾಕಲು ಜಿಲ್ಲಾಡಳಿತ ನಿರ್ಧರಿಸಿದ್ದು, ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಹೀಗಾಗಿ ಆರೋಗ್ಯ ಇಲಾಖೆ ತಹಶೀಲ್ದಾರ್ ಗಳಿಂದ ಮಾಹಿತಿ ಪಡೆದು ಸ್ಥಳಾಂತರಗೊಳ್ಳುತ್ತಿರುವ ಕುಟುಂಬಗಳಿಗೆ ವ್ಯಾಕ್ಸಿನ್ ವಿತರಣೆಗೆ ಮುಂದಾಗಿದೆ.