ಕೊಪ್ಪಳ: ಕರುವಿನ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆ ಗ್ರಾಮದಲ್ಲಿ ನಡೆದಿದೆ.
ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆ ಗ್ರಾಮದ ಮೇಲ್ಭಾಗದ ವೀರುಪಣ್ಣ ಎಂಬವರ ಕರುವಿನ ಮೇಲೆ ಚಿರತೆ ದಾಳಿ ನಡೆಸಿದೆ. ಕರುವಿನ ಕುತ್ತಿಗೆ ಭಾಗಕ್ಕೆ ಚಿರತೆ ಕಚ್ಚಿ ಗಾಯ ಮಾಡಿದೆ. ಕರುವಿನ ಚೀರಾಟಕ್ಕೆ ಹತ್ತಿರದಲ್ಲಿರುವ ಜನರು ಓಡಿ ಬಂದು ಅದರ ಪ್ರಾಣವನ್ನು ರಕ್ಷಿಸಿದ್ದಾರೆ. ಬಳಿಕ ಚಿರತೆಯನ್ನು ಗ್ರಾಮಸ್ಥರು ಸ್ಥಳದಿಂದ ಓಡಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದಷ್ಟೇ ಆನೆಗೊಂದಿಯಲ್ಲಿ ಹುಲಿಗೇಶ್ ಎಂಬ ಯುವಕನ ಮೇಲೆ ಚಿರತೆ ದಾಳಿ ಮಾಡಿ ತಿಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಚಿರತೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಇದೀಗ ಮತ್ತೆ ಚಿರತೆ ಪ್ರತ್ಯಕ್ಷವಾಗಿ ದಾಳಿ ನಡೆಸಿರುವುದರಂದ ಆನೆಗೊಂದಿ ಭಾಗದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಶೀಘ್ರವೇ ಚಿರತೆ ಹಿಡಿಯಬೇಕೆಂದು ಗ್ರಾಮಸ್ಥರು ಅರಣ್ಯ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.