ನವದೆಹಲಿ: ಕೊರೊನಾ ಸೋಂಕಿನಿಂದ ತೀವ್ರವಾಗಿ ಬಳಲುತ್ತಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಪ್ಲಾಸ್ಮಾ ಥೆರಪಿ ಬಳಿಕ ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಸೋಂಕು ಶ್ವಾಸಕೋಶದಲ್ಲಿ ಹೆಚ್ಚಾಗಿ ವ್ಯಾಪಿಸಿದ ಹಿನ್ನೆಲೆ ಮ್ಯಾಕ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.
ಸೋಂಕು ಹೆಚ್ಚಾಗಿದ್ದ ಹಿನ್ನೆಲೆ ಕುಟುಂಬದ ಒಪ್ಪಿಗೆ ಮೇರೆಗೆ ಪ್ಲಾಸ್ಮಾ ಥೆರಪಿ ನಡೆಸಲಾಗಿತ್ತು. ಥೆರಪಿ ಬಳಿಕ ಸತ್ಯೇಂದ್ರ ಜೈನ್ ಆರೋಗ್ಯವಾಗಿದ್ದು ಇಂದು ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ.
ಆರೋಗ್ಯ ಸಚಿವರಾಗಿದ್ದ ಸತ್ಯೇಂದ್ರ ಜೈನ್ ಹಲವು ಸಭೆಗಳು ಸೇರಿ ಆಸ್ಪತ್ರೆಗಳಿಗೆ ಭೇಟಿ ನೀಡಿದ್ದರು. ಈ ಹಿನ್ನೆಲೆ ಅವರಲ್ಲಿ ರೋಗದ ಲಕ್ಷಣಗಳು ಕಂಡು ಬಂದಿತ್ತು. ಮೊದಲು ಟೆಸ್ಟ್ ನಡೆಸಿದಾಗ ನೆಗೆಟಿವ್ ವರದಿ ಬಂದಿತ್ತು. ಮತ್ತೊಮ್ಮೆ ಪರೀಕ್ಷೆ ನಡೆಸಿದಾಗ ಸೋಂಕಿರುವುದು ದೃಢವಾಗಿತ್ತು.