ಚಿತ್ರದುರ್ಗ: ಕೊರೊನಾ ಸೋಂಕಿನ ಭೀತಿಯಿಂದಾಗಿ ಬೆಚ್ಚಿರುವ ಜಿಲ್ಲೆಯ ಗ್ರಾಮಸ್ಥರು ಗ್ರಾಮದ ಸುತ್ತಲೂ ತೆಂಗಿನಕಾಯಿ ಕಟ್ಟಿ ಮೌಢ್ಯದ ಮೊರೆ ಹೋಗಿದ್ದಾರೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಮನ್ನೇಕೋಟೆ ಗ್ರಾಮದಲ್ಲಿ ಕೊರೊನಾ ಸೋಂಕಿನಿಂದಾಗಿ 25 ದಿನಗಳ ಅಂತರದಲ್ಲಿ 15 ಜನರ ಸರಣಿ ಸಾವಾಗಿರುವ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ಗ್ರಾಮಸ್ಥರು, ಈ ಗ್ರಾಮದ ನಾಲ್ಕು ದಿಕ್ಕಿಗೂ ಮಂತ್ರಿಸಿದ ತೆಂಗಿನಕಾಯಿ ಕಟ್ಟಿ ದಿಗ್ಬಂಧನ ಹಾಕಿದ್ದಾರೆ.
ಈ ಮೂಲಕ ಕೊರೊನಾ ಗ್ರಾಮದೊಳಗೆ ಬರುವುದಿಲ್ಲ ಎಂಬ ನಂಬಿಕೆ ಇಟ್ಟುಕೊಂಡಿದ್ದಾರೆ. ಸುಮಾರು ಎರಡು ಸಾವಿರ ಜನಸಂಖ್ಯೆಯುಳ್ಳ ಅತಿದೊಡ್ಡ ಗ್ರಾಮವಾಗಿರುವ ಮನ್ನೇಕೋಟೆಯಲ್ಲಿ, ಕಳೆದ ಒಂದು ತಿಂಗಳಿಂದ 450ಕ್ಕೂ ಹೆಚ್ಚು ಜನರು ಶೀತ, ಕೆಮ್ಮು ಹಾಗೂ ಜ್ವರದಿಂದ ಬಳಲುತ್ತಿದ್ದಾರೆ.
ಗ್ರಾಮದಲ್ಲಿ 5 ಮಂದಿ ಕೋವಿಡ್ಗೆ ಬಲಿಯಾಗಿದ್ದು, ಉಳಿದ 10 ಮಂದಿ ಇನ್ನಿತರೆ ರೋಗಗಳಿಗೆ ತುತ್ತಾಗಿದ್ದಾರೆ. ಆದರೆ ಸೌಜನ್ಯಕ್ಕೂ ಇಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಈ ಗ್ರಾಮಕ್ಕೆ ಭೇಟಿ ನೀಡಿಲ್ಲ. ಹೀಗಾಗಿ ಗ್ರಾಮಸ್ಥರೇ ಸ್ವಯಂ ಪ್ರೇರಿತರಾಗಿ ಮೌಢ್ಯದ ಮೊರೆ ಹೋಗಿದ್ದಾರೆ. ಕೊರೊನಾ ನಿಯಮ ಪಾಲಿಸದೇ ಮೂಢನಂಬಿಕೆ ಮೊರೆಹೋದ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸದ ಜಿಲ್ಲಾಡಳಿತದ ವಿರುದ್ಧ ಗ್ರಾಮದ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.