ಚಾಮರಾಜನಗರ: ತೀವ್ರ ಉಸಿರಾಟದ ಸಮಸ್ಯೆಯಿಂದ ಚಾಮರಾಜನಗರ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಆದರೆ ಮಹಿಳೆಗೆ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಜಿಲ್ಲೆಯ ಭ್ರಮರಾಂಬ ಬಡಾವಣೆಯಲ್ಲಿರುವ ಬಸವರಾಜೇಂದ್ರ ಆಸ್ಪತ್ರೆಗೆ ಭಾನುವಾರ ರಾತ್ರಿ ಉಸಿರಾಟದ ಸಮಸ್ಯೆಯಿದ್ದ ಬ್ಯಾಡಮೂಡ್ಲು ಗ್ರಾಮದ 29 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆಗೆಂದು ಬಂದಿದ್ದರು. ಇವರನ್ನು ತಪಾಸಣೆ ಮಾಡಿದ ಆಸ್ಪತ್ರೆಯ ವೈದ್ಯರು ಈಕೆಗೆ ಕೊರೊನಾ ಇರಬಹುದೆಂದು ಶಂಕಿಸಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದರು.
ಭಾನುವಾರ ರಾತ್ರಿಯೇ ಮಹಿಳೆಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೋಲೇಷನ್ ವಾರ್ಡಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಹಿಳೆಯ ಗಂಟಲು ದ್ರವ ಮಾದರಿಯನ್ನು ಚಾಮರಾಜನಗರದ ವೈದ್ಯಕೀಯ ವಿಜ್ಷಾನ ಸಂಸ್ಥೆಗಳ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ತೀವ್ರ ಉಸಿರಾಟದ ಸಮಸ್ಯೆಯಿದ್ದ ಮಹಿಳೆಯನ್ನು ತಪಾಸಣೆ ಮಾಡಿದ್ದ ಚಾಮರಾಜನಗರದ ಬಸವರಾಜೇಂದ್ರ ಆಸ್ಪತ್ರೆ ಈಕೆಗೆ ಕೊರೊನಾ ಇರಬಹುದೆಂದು ಶಂಕಿಸಿ ಸ್ವಯಂ ಪ್ರೇರಿತವಾಗಿ ಸೀಲ್ಡೌನ್ ಆಗಿದೆ. ಅಲ್ಲದೆ ಮುನ್ನೆಚರಿಕಾ ಕ್ರಮವಾಗಿ ಇಬ್ಬರು ವೈದ್ಯರು ಹಾಗೂ ಐದು ಮಂದಿ ವೈದ್ಯಕೀಯ ಸಿಬ್ಬಂದಿ ಸ್ವಯಂ ಪ್ರೇರಿತರಾಗಿ ಹೋಂ ಕ್ವಾರಂಟೈನ್ ಆಗಿದ್ದಾರೆ. ಆಸ್ಪತ್ರೆಯ ಎಲ್ಲಾ ವಿಭಾಗಗಳಿಗೂ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ಯಾನಿಟೈಸ್ ಮಾಡಲಾಗಿದೆ.