ರಾಯಚೂರು: ಕೋವಿಡ್-19 ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದ 30 ಜನರ ವಿರುದ್ಧ ರಾಯಚೂರು ಪೊಲೀಸರು ಕ್ರಮ ಕೈಗೊಂಡಿದ್ದಾರೆ. 30 ಜನರ ವಿರುದ್ಧ 29 ಪ್ರಕರಣ ದಾಖಲಿಸಿಕೊಂಡು ಕಾನೂನು ರೀತಿ ಕ್ರಮಕೈಗೊಳ್ಳಲಾಗಿದೆ ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಹೇಳಿದ್ದಾರೆ.
ಹೋಂ ಕ್ವಾರಂಟೈನ್ನಲ್ಲಿದ್ದವರು ಹೊರಗಡೆ ಬಂದ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ. ಕಳೆದ ನಾಲ್ಕು ದಿನಗಳಲ್ಲಿ 29 ಪ್ರಕರಣ ದಾಖಲಾಗಿವೆ. ಸರ್ಕಾರಿ ಆದೇಶ ಪಾಲನೆ ಮಾಡದ ಜನರ ವಿರುದ್ಧ ಕ್ರಮಕೈಗೊಳ್ಳುವುದಾಗಿ ಪೊಲೀಸರು ಈ ಮೊದಲೇ ಎಚ್ಚರಿಕೆ ನೀಡಿದ್ದರು. ಆದರೂ ಜನ ಮನೆಯಿಂದ ಹೊರಬಂದು ಓಡಾಡಿದ್ದಾರೆ. ಹೀಗಾಗಿ ಜೂನ್ 17ರಂದು 1 ಪ್ರಕರಣ, ಜೂನ್ 18ರಂದು 6, ಜೂನ್ 19ರಂದು 9, ಜೂನ್ 20ರಂದು 13 ಪ್ರಕರಣ ದಾಖಲಿಸಲಾಗಿದೆ.
ಕ್ವಾರಂಟೈನ್ ನಲ್ಲಿ ಇರುವವರು ಹೊರ ಬರದೆ ಕ್ವಾರಂಟೈನ್ನಲ್ಲಿಯೇ ಇದ್ದು ತಮ್ಮ ಅವಧಿ ಮುಗಿಯುವವರೆಗೂ ಸರ್ಕಾರಿ ಆದೇಶ ಪಾಲನೆ ಮಾಡಬೇಕು. ಕೊರೊನಾ ಸೋಂಕು ತಡೆಗಟ್ಟಲು ಸಹಕರಿಸಬೇಕು ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾರ್ವಜನಿಕರಲ್ಲಿ ಕೋರಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 429 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸದ್ಯ 2451 ಜನ ಹೋಂ ಕ್ವಾರಂಟೈನ್ನಲ್ಲಿದ್ದಾರೆ, 180 ಜನ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ. ಮನೆಗಳಲ್ಲಿ ಕ್ವಾರಂಟೈನ್ನಲ್ಲಿರುವ ಜನ ಕೈಗೆ ಮುದ್ರೆ ಹಾಕಿದರೂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿ ಹೊರಗಡೆ ಓಡಾಡುತ್ತಿರುವುದು ಗಮನಕ್ಕೆ ಬಂದು ಅಂತಹವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ.