ಕೊಪ್ಪಳ: ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಪರಣ್ಣ ಮುನವಳ್ಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಪಬ್ಲಿಕ್ ಟಿವಿಗೆ ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಮಾಹಿತಿ ನೀಡಿದ್ದಾರೆ. ಶಾಸಕರಲ್ಲಿ ಕೊರೊನಾ ಪತ್ತೆಯಾಗಿರುವುದು ಅವರ ಬೆಂಬಲಿಗರು ಹಾಗೂ ಸ್ನೇಹಿತರಲ್ಲಿ ಭಯವನ್ನುಂಟು ಮಾಡಿದೆ. ಶಾಸಕರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮುಂದಾಗಿದ್ದು, ಈಗಾಗಲೇ ಪ್ರಯಾಣ ಬೆಳೆಸಿದ್ದಾರೆ.
ಶಾಸಕ ಪರಣ್ಣ ಮುನವಳ್ಳಿ ಜುಲೈ 16ರಂದು ಜಿಲ್ಲಾಧಿಕಾರಿಗಳ ಕೋವಿಡ್-19 ನಿಯಂತ್ರಣ ಸಭೆಯಲ್ಲಿ ಸಹ ಭಾಗಿಯಾಗಿದ್ದರು. ಈ ಸಭೆಯಲ್ಲಿ ಕೊಪ್ಪಳ, ಕುಷ್ಟಗಿ, ಕನಕಗಿರಿ ಹಾಗೂ ಗಂಗಾವತಿ ಶಾಸಕರು, ಸಂಸದ ಸಂಗಣ್ಣ ಕರಡಿ ಹಾಗೂ ಜಿಲ್ಲಾಧಿಕಾರಿ ಸೇರಿ ವಿವಿಧ ಅಧಿಕಾರಿಗಳು ಭಾಗಿಯಾಗಿದ್ದರು. ಹೀಗಾಗಿ ಉಳಿದ ಶಾಸಕರು, ಸಂಸದರು ಹಾಗೂ ಅಧಿಕಾರಿಗಳಿಗೂ ಕೊರೊನಾ ಭೀತಿ ಎದರಾಗಿದೆ.