ಗಡಿಯಲ್ಲಿ ಚೀನಾ ಕಿರಿಕ್‌ – ಸಂಘರ್ಷದಲ್ಲಿ ಮೂವರು ಯೋಧರು ಹುತಾತ್ಮ

Public TV
4 Min Read
india china ladakh border conflict

ನವದೆಹಲಿ: ಭಾರತ ಚೀನಾ ನಡುವಿನ ಗಡಿಯಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು  ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.

ವಿಶ್ವಕ್ಕೆ ಕೋವಿಡ್‌ 19 ಹರಡಿಸಿದ ಚೀನಾ ಈಗ ಭಾರತದ ಜೊತೆ ಕಿತ್ತಾಟಕ್ಕೆ ಇಳಿದಿದೆ. ಮಾತುಕತೆ ನಡೆಸಿದರೂ ತನ್ನ ಬೇಡಿಕೆಗೆ ಭಾರತ ಬಗ್ಗದ ಹಿನ್ನೆಲೆಯಲ್ಲಿ ಸಂಘರ್ಷಕ್ಕೆ ಇಳಿದಿದೆ. ಲಡಾಖ್‌ ಗಡಿಯಲ್ಲಿರುವ ಗಲ್ವಾನ್‌ ಕಣಿವೆಯಲ್ಲಿ ನಿನ್ನೆ ರಾತ್ರಿ ನಡೆದ ಸಂಘರ್ಷದಲ್ಲಿ ಕರ್ನಲ್‌ ಮತ್ತು ಇಬ್ಬರು ಯೋಧರು ಮೃತಪಟ್ಟಿದ್ದಾರೆ ಎಂದು ಭಾರತೀಯ ಸೇನೆ ಅಧಿಕೃತವಾಗಿ ತಿಳಿಸಿದೆ.

ಎರಡು ಕಡೆಯೂ ರಾತ್ರಿ ಸಂಘರ್ಷ ತೀವ್ರಗೊಂಡ ಹಿನ್ನೆಲೆಯಲ್ಲಿ ಗಡಿಯಲ್ಲಿ ಎರಡು ದೇಶಗಳ ಸೇನಾ ಅಧಿಕಾರಿಗಳು ಸಭೆ ನಡೆಸುತ್ತಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಚೀನಾ ಕಡೆಯಲ್ಲೂ ಪ್ರಾಣ ಹಾನಿಯಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

indian army 2

ಗಡಿ ಎಲ್ಲಿದೆ?
ಭಾರತ ಮತ್ತು ಚೀನಾದ ನಡುವೆ ಒಟ್ಟು 3,488 ಕಿ.ಮೀ ಗಡಿ ಇದೆ. ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಮತ್ತು ರಾಜ್ಯಗಳಾದ ಉತ್ತರಾಖಂಡ್, ಹಿಮಾಚಲ ಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶಗಳು ಚೀನಾದ ಜೊತೆ ಗಡಿಯನ್ನು ಹಂಚಿಕೊಂಡಿವೆ.

ಏನಿದು ಎಲ್‍ಎಸಿ?
ಭಾರತ ಮತ್ತು ಪಾಕಿಸ್ತಾನ ಮಧ್ಯೆ ಪದೇ ಪದೇ ಗುಂಡಿನ ಚಕಮಕಿ ಬಂದಾಗ ಎಲ್‍ಒಸಿ(ಗಡಿ ನಿಯಂತ್ರಣ ರೇಖೆ ಅಥವಾ ಲೈನ್ ಆಫ್ ಕಂಟ್ರೋಲ್) ಪದ ಬರುತ್ತದೆ. ಭಾರತ ಮತ್ತು ಪಾಕಿಸ್ತಾನವನ್ನು ಜಮ್ಮು ಕಾಶ್ಮೀರದಲ್ಲಿ ಬೇರ್ಪಡಿಸುವ ಅಂತಾರಾಷ್ಟ್ರೀಯ ಗಡಿಯನ್ನು ಎಲ್‍ಒಸಿ ಎಂದು ಕರೆಯಲಾಗುತ್ತದೆ. ಅದೇ ರೀತಿಯಾಗಿ ಈ ಹಿಂದೆ ರಾಜ್ಯವಾಗಿದ್ದ ಜಮ್ಮು ಕಾಶ್ಮೀರದಲ್ಲಿ ಭಾರತ ಮತ್ತು ಚೀನಾವನ್ನು ಬೇರ್ಪಡಿಸುವ ಗಡಿಯನ್ನು ಎಲ್‍ಎಸಿ(ಗಡಿ ವಾಸ್ತವಿಕ ನಿಯಂತ್ರಣ ರೇಖೆ ಅಥವಾ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ಎಂದು ಕರೆಯಲಾಗುತ್ತದೆ. 1962ರಲ್ಲಿ ಭಾರತ ಚೀನಾ ನಡುವೆ ಯುದ್ಧದ ನಡೆಯಿತು. ಈ ಯುದ್ಧದ ಬಳಿಕ ಮುಂದೆ ಎರಡು ರಾಷ್ಟ್ರಗಳು ತಮ್ಮ ಭೂ ಪ್ರದೇಶವನ್ನು ಗುರುತಿಸಲು ಎಲ್‍ಎಸಿಯನ್ನು ಬಳಸುತ್ತಿವೆ. ಈ ಎಲ್‍ಎಸಿ ಅಂತರಾಷ್ಟ್ರೀಯ ಗಡಿ ರೇಖೆಯಲ್ಲ. ಈ ಲಡಾಖ್ ಪೂರ್ವ ಭಾಗದಲ್ಲಿರುವ ಅಕ್ಸಾಯ್ ಚೀನಾ ನಮ್ಮದು ಎನ್ನುವುದು ಭಾರತದ ವಾದ.

India China

ಭಾರತ ಏನು ಮಾಡಿದೆ?
ಕೇಂದ್ರಾಡಳಿತ ಪ್ರದೇಶವಾಗಿರುವ ಲಡಾಖ್ ಭಾಗವಾಗಿರುವ ಗ್ಯಾಲ್ವಾನ್ ಪ್ರದೇಶದಲ್ಲಿ ಸ್ಥಳಿಯರಿಗೆ ಸಹಾಯ ಮಾಡಲು ರಸ್ತೆ ನಿರ್ಮಾಣಕ್ಕೆ ಕೈ ಹಾಕಿದೆ. ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದು ಚೀನಾದ ಅಸಮಾಧಾನಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೇ ಲಡಾಖ್ ಗಡಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇನೆಯನ್ನು ನಿಯೋಜಿಸಿದೆ.

ಚೀನಾ ಕಿರಿಕ್ ಮೊದಲೆನಲ್ಲ:
ಚೀನಾ ಭಾರತದ ಜೊತೆ ಗಡಿ ವಿಚಾರದಲ್ಲಿ ಗಲಾಟೆ ಮಾಡುವುದು ಇದು ಮೊದಲೆನಲ್ಲ. ಸಾಕಷ್ಟು ಬಾರಿ ಕಿತ್ತಾಟ ನಡೆಸಿದೆ. ಆದರೆ ಈಗ ಒಂದೇ ತಿಂಗಳಿನಲ್ಲಿ ಮೂರು ಬಾರಿ ಗಡಿಯಲ್ಲಿ ಕಿರಿಕ್ ಮಾಡಿದೆ. ಮೇ 5 ರಂದು ಪಾಂಗೊಂಗ್ ಸರೋವರದ ಮೇಲೆ ಹೆಲಿಕಾಪ್ಟರ್ ಹಾರಿಸಿತ್ತು. ಇದಕ್ಕೆ ಭಾರತ ಪ್ರತಿಭಟಿಸಿತ್ತು. ಇದಾದ ಬಳಿಕ ಸಿಕ್ಕಿಂನ ನಕು ಲಾ ಪಾಸ್ ನಲ್ಲಿ ಚೀನಾ- ಭಾರತ ಸೈನಿಕರ ನಡುವೆ ಘರ್ಷಣೆ ನಡೆದಿತ್ತು. ಕೈ ಕೈ ಮಿಲಾಯಿಸಿದ್ದಕ್ಕೆ ಭಾರತೀಯ ಸೈನಿಕರು ಸರಿಯಾಗಿ ಪ್ರತ್ಯುತ್ತರ ನೀಡಿದ್ದರು. ಸ್ಥಳೀಯ ಮಾತುಕತೆಯಿಂದ ಇದನ್ನು ಪರಿಹಾರ ಮಾಡಿದ ಬಳಿಕ ಈಗ ಗಲ್ವಾನ್ ನದಿ ಕಣಿವೆಯ ಗಡಿಯಲ್ಲಿ ಸಂಘರ್ಷ ಆರಂಭವಾಗಿದೆ.

india china map 2

ಚೀನಾ ಈಗ ಏನು ಮಾಡುತ್ತಿದೆ?
ಭಾರತ ಅಭಿವೃದ್ಧಿಗೆ ಕೈ ಹಾಕಿದ್ದನ್ನೇ ನೆಪವಾಗಿರಿಸಿಕೊಂಡು ಚೀನಾ ಗಡಿಯಲ್ಲಿ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ನಿಯೋಜಿಸಿದೆ. ಪಂಗೊಂಗ್ ಸರೋವರದ ಹತ್ತಿರ ಟಿಬೆಟ್ ನಿಂದ 200 ಕಿಲೋ ಮೀಟರ್ ದೂರದಲ್ಲಿ ನಗಾರಿ ಗುನ್ಸ ವಾಯುನೆಲೆ ಹತ್ತಿರ ಬೃಹತ್ ಪ್ರಮಾಣದ ನಿರ್ಮಾಣ ಕಾಮಗಾರಿ ನಡೆಸುತ್ತಿದೆ. ಲಡಾಖ್ ಬಳಿ ವಾಯುನೆಲೆ ವಿಸ್ತರಿಸುತ್ತಿರುವ ದೃಶ್ಯಗಳು ಉಪಗ್ರಹ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಷ್ಟೇ ಅಲ್ಲದೇ ಚೀನಾ ಅತಿ ಎತ್ತರದಿಂದ ನಿಗಾ ಇಡುವ, ದಾಳಿ ಮಾಡುವ ಸಾಮರ್ಥ್ಯ ಹೊಂದಿರುವ ಡ್ರೋನ್ ನಿಯೋಜಿಸಿದೆ.

china india

ಭಾರತ ಏನು ಮಾಡುತ್ತಿದೆ?
ಚೀನಾ ಹಿಂದಿನಿಂದಲೂ ಗಡಿಯಲ್ಲಿ ಕಿರಿಕ್ ಮಾಡುತ್ತಲೇ ಇದೆ. ಸಂಯಮದಿಂದಲೇ ಇರುವ ಭಾರತೀಯ ಸೈನಿಕರು ಈಗ ಚೀನಿಯರ ಈ ಆಟಕ್ಕೆ ಬ್ರೇಕ್ ಹಾಕಿದ್ದಾರೆ. ಚೀನಾ ಎಲ್ಲೆಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನು ಜಮಾವಣೆ ಮಾಡಿದೆಯೋ ಆ ಪ್ರದೇಶಲ್ಲಿ ಭಾರತವೂ ಸಮಬಲ ಎಂಬಂತೆ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಯನ್ನು ಜಮಾವಣೆ ಮಾಡಿದೆ. ಚೀನಾ ಡ್ರೋನ್ ಗೆ ಪ್ರತಿಯಾಗಿ ಭಾರತವೂ ಡ್ರೋನ್ ಕ್ಯಾಮೆರಾ ನಿಯೋಜಿಸಿದೆ.

LADAKH INDIAN CHINA

 

ಚೀನಾ ಈಗ ಕಿರಿಕ್ ಮಾಡಿದ್ದು ಯಾಕೆ?
ಚೀನಾ ಭಾರತದ ಜೊತೆಗಿನ ಗಲಾಟೆಗೆ ಸುಮಾರು 50 ವರ್ಷಗಳ ಹಿಂದಿನ ಇತಿಹಾಸವಿದೆ. 1950ರಲ್ಲಿ ಟಿಬೆಟ್ ಆಕ್ರಮಿಸಿದ ಬಳಿಕ ಭಾರತ ದಲೈ ಲಾಮಾ ಅವರಿಗೆ ಆಶ್ರಯ ನೀಡಿದ್ದಕ್ಕೆ ಆಕ್ಷೇಪವಿದೆ. ಚೀನಾ ಪಾಕಿಸ್ತಾನ ಆರ್ಥಿಕ ಕಾರಿಡಾರ್(ಸಿಪಿಇಸಿ) ಯೋಜನೆಗೆ ಭಾರತದಿಂದ ವಿರೋಧವಿದೆ. ಈಗ ಕೊರೊನಾ ವೈರಸ್ ವಿಚಾರದಲ್ಲಿ ವಿಶ್ವದ ಹಲವು ಕಂಪನಿಗಳು ಚೀನಾ ತೊರೆದು ಭಾರತದಲ್ಲಿ ಉದ್ಯಮ ಸ್ಥಾಪನೆಗೆ ಮುಂದಾಗುತ್ತಿದೆ. ಈ ವಿಚಾರವನ್ನು ಚೀನಾಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಉದ್ಯಮ ಸ್ಥಾಪಿಸಲು ಮುಂದಾಗುತ್ತಿರುವ ಕಂಪನಿಗಳಿಗೆ ಭಾರತದಲ್ಲಿ ಅಭದ್ರತೆ ಇದೆ ಎಂದು ತೋರಿಸಲು ಚೀನಾ ಕ್ಯಾತೆ ತೆರೆದಿದೆ.

ಚೀನಾ ಮೊದಲಿನಿಂದಲೂ ರಾಷ್ಟ್ರೀಯವಾದಿ ದೇಶ. ಕೊರೊನಾ ವಿಚಾರದಲ್ಲಿ ಸುಳ್ಳು ಹೇಳಿರುವ ವಿಚಾರ ಈಗಾಗಲೇ ಬಹಿರಂಗವಾಗಿದೆ. ಈ ಕಾರಣಕ್ಕೆ ಜನರನ್ನು ಈ ವಿಚಾರದಿಂದ ವಿಮುಖರನ್ನಾಗಿಸಿ ರಾಷ್ಟ್ರೀಯತೆ ವಿಚಾರದತ್ತ ಸೆಳೆಯಲು ಚೀನಾ ದಿಢೀರ್ ಭಾರತದ ವಿರುದ್ಧ ಕ್ಯಾತೆ ತೆಗೆದಿದೆ.

Share This Article
Leave a Comment

Leave a Reply

Your email address will not be published. Required fields are marked *