ಮಂಗಳೂರು: ಗ್ರಾಮ ಪಂಚಾಯ್ತಿ ಚುನಾವಣಾ ಫಲಿತಾಂಶದ ಬಳಿಕ ನಡೆದ ವಿಜಯೋತ್ಸವದ ವೇಳೆ ವಾಹನ ಪಲ್ಟಿಯಾಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ನೆಟ್ಲ ನಿವಾಸಿ ನರೇಶ್ (30) ಎಂದು ಗುರುತಿಸಲಾಗಿದೆ. ನಿನ್ನೆ ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. ಅಂತೆಯೇ ಗೋಳ್ತಮಜಲು ಗ್ರಾಮ ಪಂಚಾಯ್ತಿಯಲ್ಲಿ ಗೆದ್ದವರಿಂದ ಸಂಭ್ರಮಾಚರಣೆ ನಡೆಸಲಾಗುತ್ತಿತ್ತು.
ಸಂಭ್ರಮದ ವೇಳೆ ಜೀಪ್ ಪಲ್ಟಿಯಾಗಿದೆ. ಪರಿಣಾಮ ನರೇಶ್ ಸಾವನ್ನಪ್ಪಿದ್ರೆ, ಜೀಪ್ ನಲ್ಲಿದ್ದ ವಿಜೇತ ಅಭ್ಯರ್ಥಿ ದೀಪಕ್, ಜಗನ್ನಾಥ, ಗುರುವಪ್ಪ, ಸುಚಿತ್ರಾ, ನಳಿನಿ ಹಾಗೂ ಯೋಗೀಶ್ ಗೆ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಘಟನೆ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.