– ಕೋವಿಡ್ ಕೇಂದ್ರಗಳಲ್ಲಿ ಟಿವಿ, ಮಕ್ಕಳಿಗೆ ಆಟಿಕೆ ವ್ಯವಸ್ಥೆ
ಚಾಮರಾಜನಗರ: ಜಿಲ್ಲೆಯಲ್ಲಿ ಇನ್ನೊಂದು ವಾರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 500 ಗಡಿ ದಾಟಲಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತೊಂದು ಕೋವಿಡ್ ಕೇರ್ ಸೆಂಟರ್ ತೆರೆಯಲು ಸಿದ್ದೆತೆ ನಡೆಸಿದೆ.
ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಕೊಳ್ಳೇಗಾಲ, ಗುಂಡ್ಲುಪೇಟೆಯಲ್ಲಿ ಹಾಗೂ ಚಾಮರಾಜನಗರ ಪಟ್ಟಣದಲ್ಲಿ ಅತಿ ಹೆಚ್ಚು ಕರೊನಾ ಸೋಂಕಿತರಿದ್ದಾರೆ. ಮುಂದಿನ ಒಂದು ವಾರದಲ್ಲಿ ಕರೊನಾ ಪ್ರಕರಣಗಳು 500 ಗಡಿ ದಾಟಲಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಗರದ ಹೊರವಲಯದ ಬೇಡರಪುರದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ 250 ಹಾಸಿಗೆ ಸಾಮಥ್ರ್ಯದ ಕೋವಿಡ್ ಕೇರ್ ಕೇಂದ್ರವನ್ನು ಸಜ್ಜುಗೊಳಿಸುತ್ತಿದೆ.
ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾದಲ್ಲಿ ಮೊದಲು ಕೋವಿಡ್-19 ಆಸ್ಪತ್ರೆಗೆ ದಾಖಲು ಮಾಡಿಕೊಂಡು, ಆರೋಗ್ಯ ಸುಧಾರಣೆಯಾಗಿರುವ ಹಾಗೂ ರೋಗಲಕ್ಷಣಗಳಿಲ್ಲದವರನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಶಿಫ್ಟ್ ಮಾಡಲು ನಿರ್ಧರಿಸಲಾಗಿದೆ. ಕೊರೊನಾ ವಿರುದ್ದ ಹೋರಾಡುತ್ತಿರುವ 27 ಕೊರೊನಾ ವಾರಿಯರ್ಸ್ ಗಳಿಗೆ ಸೋಂಕು ಧೃಡ ಪಟ್ಟಿದೆ. ಕರೊನಾ ವಾರಿಯರ್ಸ್ ಗೆ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಬ್ಲಾಕ್ ನಲ್ಲಿ 150 ಹಾಸಿಗೆಗಳು ಹಾಗೂ ಸಿವಿಲ್ ಬ್ಲಾಕ್ ನಲ್ಲಿ 100 ಹಾಸಿಗೆಗಳನ್ನ ಮೀಸಲಿಡಲಾಗಿದೆ.
ಕೋವಿಡ್ ಕೇರ್ ಸೆಂಟರ್ ನಲ್ಲಿ ಶುಚಿತ್ವ ಕಾಪಾಡುವಂತೆ ಸೂಚನೆ ನೀಡಲಾಗಿದೆ. ಮರಂಜನೆಗಾಗಿ ದೊಡ್ಡ ಟಿವಿಗಳನ್ನು ಅಳವಡಿಸಿ ಮಕ್ಕಳಿಗೆ ಬೇಸರವಾಗದಂತೆ ಕಾಲಕಳೆಯಲು ಆಟಿಕೆಗಳನ್ನ ನೀಡಿ, ದಿನಪತ್ರಿಕೆ ಇಡುವ ವ್ಯವಸ್ಥೆ ಮಾಡಲಾಗಿದೆ. ಕರೊನಾ ಸೋಂಕಿತರಿಗೆ ಉತ್ತಮ ಗುಣ ಮಟ್ಟ ಹಾಗೂ ಪೌಷ್ಟಿಕಾಂಶವುಳ್ಳ ಆಹಾರ ನೀಡಲು ಕಟ್ಟು ನೀಟ್ಟಿನ ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 346 ಕೊರೊನಾ ಪ್ರಕರಣಗಳು ಕಂಡು ಬಂದಿದ್ದು, 143 ಕೊರೊನಾ ಸಕ್ರೀಯ ಪ್ರಕರಣಗಳಿದ್ದು, 199 ಮಂದಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆದ್ರೆ ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ಕೋವಿಡ್-19 ಚಿಕಿತ್ಸೆಗೆ ಯಾವುದೇ ಹಣದ ಕೊರತೆ ಇಲ್ಲ. ಸರ್ಕಾರ 6.15 ಕೋಟಿ ರೂಪಾಯಿ ವೆಚ್ಚಕ್ಕೆ ಅನುಮೋದನೆ ನೀಡಿದೆ. ಪ್ರಸ್ತುತ ಈ ಹಣವನ್ನು ಬಳಸಲಾಗುತ್ತಿದೆ. ಎಸ್.ಡಿ.ಆರ್.ಎಫ್ ಫಂಡ್ ನಲ್ಲಿ 11 ಕೋಟಿ ರೂಪಾಯಿ ಇದೆ, ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಲ್ಲಿ 3 ಕೋಟಿ ರೂಪಾಯಿ ಇದೆ. ಕೊರೊನಾ ನಿರ್ವಹಣೆಯನ್ನು ಜಿಲ್ಲಾಡಳಿತ ಸಮರ್ಥವಾಗಿ ನಿಭಾಯಿಸಲಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.