ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟಿಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ.
ಮಳೆಗಾಲ ಪ್ರಾರಂಭವಾದ ಬಳಿಕ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಭೂಕುಸಿತ ಮತ್ತು ಮರಗಳು ಧರೆಗುರುಳುವ ಸಾಧ್ಯತೆಗಳಿದ್ದು, ಸದಾ ಇಬ್ಬನಿ ಕವಿದಿರುವುದರಿಂದ ಸಂಚಾರಕ್ಕೆ ಅಡಚಣೆ ಉಂಟಾಗುವುದು ಸಹಜವಾಗಿದೆ. ಹಾಗಾಗಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನ ಸಂಚಾರ ಬಂದ್ ಮಾಡುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಆದೇಶ ಹೊರಡಿಸಿದ್ದಾರೆ.
ಶಿರಾಡಿ ಘಾಟ್ ಬಂದ್ ಹಿನ್ನೆಲೆ ಚಾರ್ಮಾಡಿ ಮಾರ್ಗವಾಗಿ ಸಂಚರಿಸುತ್ತಿರುವ ವಾಹನಗಳ ಸಂಖ್ಯೆ ಹೆಚ್ಚಳವಾಗಿದೆ. ಅದಲ್ಲದೆ ಘಣ ವಾಹನಗಳ ಓಡಾಟವು ಕೂಡ ಹೆಚ್ಚು ಕಂಡು ಬಂದಿದ್ದು, ಹಾಗಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ದಿನದ 24 ಗಂಟೆಯೂ ಬುಲೆಟ್ ಟ್ಯಾಂಕರ್, ಪಿಷ್ ಕಾರ್ಗೋ ಕಂಟೈನರ್ಸ್ ಸೇರಿದಂತೆ ಘಣವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಚಾರ್ಮಾಡಿಯಲ್ಲಿ ಎಲ್ಲೆಂದರಲ್ಲಿ ಪ್ರವಾಸಿಗರ ಡ್ಯಾನ್ಸ್- ವಾಹನ ಸವಾರರಿಗೆ ಕಿರಿಕಿರಿ
ಸಾರ್ವಜನಿಕರು ಸಂಚರಿಸುವ ಕೆಎಸ್ಆರ್ ಟಿಸಿ ಕೆಂಪು ಬಸ್, ನಾಲ್ಕು ಚಕ್ರದ ವಾಹನಗಳು, ಕಾರು, ಜೀಪು, ದ್ವಿಚಕ್ರ ವಾಹನಗಳು ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮಾತ್ರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ತುರ್ತು ವೈದ್ಯಕೀಯ ಆಂಬ್ಯುಲೆನ್ಸ್, ಆಕ್ಸಿಜನ್ ವಿತರಣಾ ವಾಹನಗಳ ಸಂಚಾರಕ್ಕೆ ಮಾತ್ರ 24 ಗಂಟೆಗಳ ಅವಕಾಶ ಕಲ್ಪಿಸಲಾಗಿದೆ. ಈ ಆದೇಶ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಡಿಸಿ ಆದೇಶ ಹೊರಡಿಸಿದ್ದಾರೆ.