ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಆಕ್ಸಿಜನ್ ಗೂ ಸಹ ಬೇಡಿಕೆ ಹೆಚ್ಚಾಗುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ಸಮಾಜಘಾತುಕ ಶಕ್ತಿಗಳು ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿನ 10 ಆಕ್ಸಿಜನ್ ಸಿಲಿಂಡರ್ ಗಳನ್ನು ಕಳ್ಳತನ ಮಾಡಿರುವ ಬಗ್ಗೆ ವರದಿಯಾಗಿದೆ.
ಆಕ್ಸಿಜನ್ ಕಳ್ಳತನವಾಗಿರುವುದು ಕೂಡ ಆರೋಗ್ಯ ಸಚಿವ ಸುಧಾಕರ್ ತವರು ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ. ಜಿಲ್ಲಾ ಕೋವಿಡ್ 19 ಆಸ್ಪತ್ರೆಯಲ್ಲಿ ಇದ್ದಂತಹ ಆಕ್ಸಿಜನ್ ಸಿಲಿಂಡರ್ ಗಳನ್ನು ರಾತ್ರೋರಾತ್ರಿ ಕಳ್ಳರು ಎಗರಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ವೈದ್ಯರು, ಪೊಲೀಸರಿಗೆ ದೂರು ನೀಡಿದ್ದು ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಚಿಕ್ಕಬಳ್ಳಾಪುರ ಪೊಲೀಸರು ಈಗಾಗಲೇ ಆಸ್ಪತ್ರೆಯ ಮೂವರು ಶಂಕಿತ ಸಿಬ್ಬಂದಿಯನ್ನು ವಿಚಾರಣೆಗೊಳಪಡಿಸಿದ್ದಾರೆ. ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾದಂತೆ, ಆಕ್ಸಿಜನ್ ಗೆ ಹೆಚ್ಚಿನ ಬೇಡಿಕೆ ಇರುವುದರಿಂದಾಗಿ ಹಣದಾಸೆಗೆ ಖದೀಮರು ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ.