ಚಿಕ್ಕಮಗಳೂರು: ಎರಡು ಪೊಲೀಸ್ ಠಾಣೆಯ ನಾಲ್ವರು ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರ ಹಾಗೂ ಕಡೂರು ತಾಲೂಕಿನ ಯಗಟಿ ಪೊಲೀಸ್ ಠಾಣೆಗಳನ್ನು ಸೀಲ್ಡೌನ್ ಮಾಡಲಾಗಿದೆ.
ಕೊರೊನಾ ಸೋಂಕಿತ ಪೇದೆಗಳನ್ನು ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತರೀಕೆರೆ ತಾಲೂಕಿನ ಮುಂಡ್ರೆ ಗ್ರಾಮದಿಂದ ಯಗಟಿ ಠಾಣೆಗೆ ಪ್ರತಿನಿತ್ಯ ಓಡಾಡುತ್ತಿದ್ದ ಪೇದೆಗೆ ಜ್ವರ ಬಂದ ಹಿನ್ನೆಲೆ ಬೀರೂರು ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದರು. ಇದೀಗ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವುದರಿಂದ ಯಗಟಿ ಠಾಣೆಯನ್ನು ಸೀಲ್ಡೌನ್ ಮಾಡಿ, ಠಾಣೆಯ ಇತರೆ ಸಿಬ್ಬಂದಿಯನ್ನು ಕ್ವಾರಂಟೈನ್ನಲ್ಲಿರಲು ಸೂಚಿಸಲಾಗಿದೆ.
ಅಜ್ಜಂಪುರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಪೇದೆಗೆ ನಾಲ್ಕು ದಿನಗಳಿಂದ ಆರೋಗ್ಯದಲ್ಲಿ ಏರುಪೇರಾಗಿತ್ತು. ಪರೀಕ್ಷೆಯ ಬಳಿಕ ಅವರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಅಜ್ಜಂಪುರ ಠಾಣೆಯ ಸಿಬ್ಬಂದಿಗೆ ಕ್ವಾರಂಟೈನ್ನಲ್ಲಿರುವಂತೆ ಸೂಚಿಸಿ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.
ಮೂರೇ ದಿನಕ್ಕೆ 82 ಪ್ರಕರಣ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜಿಲ್ಲೆಯ ಜನ ಆತಂಕಕ್ಕೀಡಾಗಿದ್ದಾರೆ. ಜಿಲ್ಲೆಯಲ್ಲಿ ಈವರಗೆ 250 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಆದರೆ ಕಳೆದ ಮೂರು ದಿನಗಳಲ್ಲಿ 82 ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯ ಜನರಿಗೆ ಆತಂಕ ಶುರುವಾಗಿದೆ.
ಈ ಮಧ್ಯೆ ಹೊರ ಜಿಲ್ಲೆಯ ಸಂಪರ್ಕವೇ ಇಲ್ಲದ ಸುಮಾರು 25-30ಕ್ಕೂ ಹೆಚ್ವು ಜನರಿಗೆ ಸೋಂಕು ತಗುಲಿದೆ. ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಸಮುದಾಯಕ್ಕೆ ಹರಿಡಿದೆಯೇ ಎಂಬ ಅನುಮಾನ ಶುರುವಾಗಿದೆ. ಕೊರೊನಾ ಆರಂಭದ ಮೊದಲ 55 ದಿನಗಳ ಕಾಲ ಕೊರೊನಾ ಪ್ರಕರಣ ಪತ್ತೆಯಾಗಿರಲಿಲ್ಲ. ಆದರೆ ಮೇ 19ರ ನಂತರದ 60 ದಿನಕ್ಕೆ 250 ಪ್ರಕರಣಗಳು ಪತ್ತೆಯಾಗಿದ್ದವು. ಇದೀಗ ಮೂರೇ ದಿನಕ್ಕೆ 82 ಪ್ರಕರಣ ಪತ್ತೆಯಾಗಿರುವುದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ.