ಹಾಸನ: ಚೀನಾ ದಾಳಿ ಎದುರಿಸಲು ಭಾರತ ಸನ್ನದ್ಧವಾಗಿದ್ದು, ನಮ್ಮ ಪ್ರಧಾನಿ ಈ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಮಾಡಲಿದ್ದಾರೆ ಎಂದು ಸಚಿವ ಗೋಪಾಲಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಅವರು ವಿಶ್ವದ ನಾಯಕ. ಇಡೀ ಜಗತ್ತು ಅವರನ್ನು ಕೊಂಡಾಡುತ್ತಿದೆ ಎಂದು ಮೋದಿ ನಾಯಕತ್ವವನ್ನು ಹಾಡಿ ಹೊಗಳಿದರು.
ಇದೇ ವೇಳೆ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಮುಖ್ಯಮಂತ್ರಿಗಳು ಒಳ್ಳೆಯ ನಿರ್ಧಾರ ಕೈಗೊಳ್ಳಲಿದ್ದಾರೆ. ಕೋರ್ ಕಮಿಟಿಗೆ ಹಲವರ ಹೆಸರು ಬಂದಿದೆ. ಅಮನತಿಮವಾಗಿ ಯಾರು ಅಭ್ಯರ್ಥಿ ಆಗಬೇಕೆಂದು ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದರು.
ಎಚ್ ವಿಶ್ವನಾಥ್, ಎಂಟಿಬಿ ನಾಗರಾಜ್ ಗೆ ಟಿಕೆಟ್ ನೀಡಲು ನನ್ನ ಬೆಂಬಲ ಇದೆ. ಸಣ್ಣಪುಟ್ಟ ಗೊಂದಲ ಇದ್ದರೆ ಇನ್ನೆರಡು ದಿನಗಳಲ್ಲಿ ಎಲ್ಲವೂ ತೀರ್ಮಾನವಾಗಲಿದೆ ಎಂದು ತಿಳಿಸಿದ್ದಾರೆ.
ಎಸ್ ಎಸ್ ಎಲ್ ಸಿ ಮಕ್ಕಳು ಧೈರ್ಯವಾಗಿ ಪರೀಕ್ಷೆ ಬರೆಯಿರಿ. ನಿಮ್ಮೊಂದಿಗೆ ಸರ್ಕಾರ ಇದೆ. ಪಾಲಕರು ಮಕ್ಕಳು ಆತಂಕಗೊಳ್ಳೋದು ಬೇಡ. ಹಾಸನ ಜಿಲ್ಲೆಗೆ ಕಳೆದ ಬಾರಿಯಂತೆ ಈ ಸಲವೂ ಉತ್ತಮ ಫಲಿತಾಂಶ ಬರಲಿದೆ ಎಂದು ಪೋಷಕರು ಮತ್ತು ಮಕ್ಕಳಿಗೆ ಧೈರ್ಯ ತುಂಬಿದ್ದಾರೆ. ಇದೇ ವೇಳೆ ಪಡಿತರ ಅಕ್ಕಿ ಶೇಖರಣೆ ಮಾಡಿರುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವ ಬಗ್ಗೆ ಸಚಿವ ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ.