ಬೆಂಗಳೂರು: ಟಿಪ್ಪರ್ ಹಾಗೂ ಕೆಎಸ್ಆರ್ಟಿಸಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಚಾಲಕ ದಾರಣವಾಗಿ ಸಾವನ್ನಪ್ಪಿದ್ದಾರೆ.
ಆನೇಕಲ್ ಸಮೀಪದ ತಟ್ಟೆಕೆರೆ ಗ್ರಾಮದ ಬಳಿ ಘಟನೆ ನಡೆದಿದ್ದು, ಹಾರೋಹಳ್ಳಿಯಿಂದ ಆನೇಕಲ್ ಗೆ ಬರುತ್ತಿದ್ದ ವೇಳೆ ಬಸ್ ಹಾಗೂ ಟಿಪ್ಪರ್ ಮಧ್ಯೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ತೀವ್ರ ಗಾಯಗೊಂಡಿದ್ದ ಬಸ್ ಚಾಲಕ ಅಭಿಬ್ ಜಾನ್(55) ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗುರುವಾರ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಗೊಂಡ ಬಸ್ ಚಾಲಕನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ ಐದಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.