ಬೆಳಗಾವಿ/ಚಿಕ್ಕೋಡಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಯಡಿಯೂರಪ್ಪನವರು ಮೊದಲೇ ಭೇಟಿ ಕೊಡಬೇಕಿತ್ತು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬರುತ್ತಿದ್ದಾರೆ ಎನ್ನುವ ಕಾರಣಕ್ಕೆ ಸಿಎಂ ಕೂಡ ಬರುತ್ತಿದ್ದಾರೆ ಎಂದು ಸರ್ಕಾರದ ವಿರುದ್ದ ಕೆಪಿಸಿಸಿ ಸತೀಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರವಾಹ ವೀಕ್ಷಣೆಗೆ ಬರುತ್ತೇನೆ ಎಂದ ಮೇಲೆ ಸಿಎಂ ಕೂಡ ಬರುತ್ತಿದ್ದಾರೆ. ಸಿಎಂ ಹಾಗೂ ಕಂದಾಯ ಸಚಿವರು ಮುಂಚೆನೆ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ಕೊಟ್ಟು ಅಧಿಕಾರಿಗಳ ಸಭೆ ನಡೆಸಬೇಕಿತ್ತು. ಕಾಂಗ್ರೆಸ್ ಅಧ್ಯಕ್ಷರು ಬರುತ್ತಾರೆ ಎನ್ನುವ ಕಾರಣಕ್ಕೆ ಮಾತ್ರ ಅವರು ಕೂಡ ಬರುತ್ತಿದ್ದಾರೆ. ಸಿಎಂ ಅವರ ಹತ್ತಿರ ವಿಮಾನ, ಹೆಲಿಕಾಪ್ಟರ್ ವ್ಯವಸ್ಥೆಯಿದ್ದರೂ ಈಗ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಆಗಮಿತ್ತಿದ್ದಾರೆ ಎಂದರು.
ರಾಜ್ಯ ಬಿಜೆಪಿ ಸರ್ಕಾರದಲ್ಲಿ ಅನೇಕ ಹಗರಣಗಳು ಆಗಿವೆ. ಹಗರಣಗಳ ಬಗ್ಗೆ ಸರ್ಕಾರದ ಗಮನಕ್ಕೂ ಬಂದರು ಯಾವುದೇ ಕ್ರಮ ಕೈಗೊಂಡಿಲ್ಲ.ನಾವು ಕೂಡ ದಾಖಲೆ ಸಂಗ್ರಹಿಸಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ಕಳೆದ ಬಾರಿ ಪ್ರವಾಹ ಬಂದಾಗ ಸರ್ಕಾರ ಕೇವಲ 2 ಲಕ್ಷ ಪರಿಹಾರ ಘೋಷಣೆ ಮಾಡಿತ್ತು. ಕಾಂಗ್ರೆಸ್ ಪಕ್ಷ ಹೋರಾಟ ಮಾಡಿದ ನಂತರ ಪರಿಹಾರವನ್ನ 5 ಲಕ್ಷಕ್ಕೆ ಹೆಚ್ಚಿಸಿತ್ತು. ವಿರೋಧ ಪಕ್ಷವಾಗಿ ಸರ್ಕಾರವನ್ನ ಎಚ್ಚರಿಸುವ ಕೆಲಸವನ್ನ ಕಾಂಗ್ರೆಸ್ ಮಾಡುತ್ತಿದೆ. ಕಳೆದ ಬಾರಿ ಪರಿಹಾರ ನೀಡದೆ ಇರುವದು ಹಾಗೂ ಹಗರಣಗಳ ಬಗ್ಗೆ ಬರುವ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇವೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.