ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಂಧನ ಸುದ್ದಿ ತಿಳಿದು ತಂದೆ ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಡಿಜೆ ಹಳ್ಳಿಯ ಕುಬ್ಬ ಮಸೀದಿ ರಸ್ತೆಯ ನಿವಾಸಿ ಫರ್ಹಾನ್ ಬಂಧನದ ಸುದ್ದಿ ಕೇಳಿ ಆತನ ತಂದೆಗೆ ಹೃದಯಾಘಾತವಾಗಿದ್ದು, ಸಾವನ್ನಪ್ಪಿದ್ದಾರೆ. ಫರ್ಹಾನ್ ಗಲಭೆಯಲ್ಲಿ ಭಾಗಿಯಾಗಿ ಪೊಲೀಸರ ವಶದಲ್ಲಿದ್ದು, ಘಟನೆ ಸಂಬಂಧ ಗುರುವಾರ ಮಧ್ಯಾಹ್ನ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಆತನ ತಂದೆ ಸಾವನ್ನಪ್ಪಿರುವ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡಿ ಮಾನವೀಯತೆ ಮರೆದಿದ್ದಾರೆ. ತಂದೆಯ ಅಂತ್ಯ ಸಂಸ್ಕಾರಕ್ಕೆ ತೆರಳಲು ಆರೋಪಿ ಫರ್ಹಾನ್ಗೆ ಅವಕಾಶ ಕಲ್ಪಿಸಿದ್ದಾರೆ.
ಗಲಭೆ ಸಂಬಂಧ ಇದುವರೆಗೂ 151 ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಮುಖ ಆರೋಪಿ ಮುಜಾಮಿಲ್ನನ್ನು ಐದು ದಿನ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಕೋವಿಡ್ ಪರೀಕ್ಷೆಗೆ ಒಳಪಟ್ಟ 40 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮೂವರಿಗೆ ಕೊರೋನಾ ಬಂದಿದೆ. ಉಳಿದ ಆರೋಪಿಗಳ ಟೆಸ್ಟ್ ವರದಿ ಬಂದ ಬಳಿಕ ಕೋರ್ಟ್ಗೆ ಹಾಜರುಪಡಿಸಲಾಗುತ್ತದೆ. ತನಿಖೆ ಹಂತದಲ್ಲಿ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ನಾವೇ ಮಾಹಿತಿ ನೀಡುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.