ಕೊಪ್ಪಳ: ಕೃಷಿ ಸಚಿವ ಬಿ.ಸಿ.ಪಾಟೀಲ್ ಮತ್ತೆ ತಮ್ಮ ನಾಲಗೆ ಹರಿಬಿಟ್ಟಿದ್ದು, ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರು ಭಯೋತ್ಪಾದಕರು ಎಂಬ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವರಿಗೆ ಬೇರೆ ದೇಶಗಳ ಬೆಂಬಲದ ಜೊತೆ ಪಾಕಿಸ್ತಾನದ ಕುಮ್ಮಕ್ಕು ಇದೆ. ಕೆಂಪು ಕೋಟೆ ಬಳಿ ಗಲಾಟೆ ಮಾಡ್ತಾರೆ ಅಂದ್ರೆ ಇವರಿಗೆ ಭಯೋತ್ಪಾದಕರ ಬೆಂಬಲ ಎಷ್ಟಿದೆ ಎಂಬುದನ್ನ ಅರ್ಥ ಮಾಡಿಕೊಳ್ಳಬೇಕಿದೆ. ಕೆಂಪುಕೋಟಿಗೆ ಮುತ್ತಿಗೆ ಹಾಕಿರೋದು ಭಯೋತ್ಪಾದನೆ ಕೃತ್ಯ ಎಂದು ಆಕ್ರೋಶ ಹೊರ ಹಾಕಿದರು.
ನಮ್ಮ ದೇಶದ ರೈತರು ಯಾವತ್ತೂ ಕಾನೂನುಗಳನ್ನು ಕೈಗೆ ತೆಗೆದುಕೊಳ್ಳುವದಿಲ್ಲ. ಪ್ರತಿಭಟನಾ ನಿರತರ ಹಿಂದೆ ಪಾಕಿಸ್ತಾನ ಮತ್ತು ಕಾಂಗ್ರೆಸ್ ಇದೆ. ಪ್ರಧಾನಿ ಮೋದಿಯವರ ಜನಪ್ರಿಯತೆ ಕಂಡು ಭಯೋತ್ಪಾದಕರನ್ನ ಕರೆ ತಂದು ಅವರಿಗೆ ರೈತರು ಹೆಸರಿಟ್ಟು ಭಯೋತ್ಪಾದನೆ ಮಾಡಿಸುತ್ತಿದ್ದಾರೆ. ಈ ಪ್ರತಿಭಟನೆಗೆ ಸಂಪೂರ್ಣ ಪಾಕಿಸ್ತಾನ ಮತ್ತು ಕಾಂಗ್ರೆಸ್ ನವರ ಕುಮ್ಮುಕ್ಕು ಇದ್ದು, ಯಾರೇ ಕಾನೂನು ಕೈಗೆ ತಗೆದುಕೊಂಡರು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗವುದು ಎಂದು ಹೇಳಿದರು.
ಈ ಹಿಂದೆ ಆತ್ಮಹತ್ಯೆಗೆ ಶರಣಾಗುವ ರೈತರು ಹೇಡಿಗಳು. ಸರ್ಕಾರದ ಕಾನೂನುಗಳು ರೈತರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಲ್ಲ ಎಂದು ಮಡಿಕೇರಿಯಲ್ಲಿ ಹೇಳಿದ್ದರು. ಇನ್ನೂ ಕೆಲ ದಿನಗಳ ಹಿಂದೆ ಮೈಸೂರಿನಲ್ಲಿಯೂ ತಮ್ಮ ವಿವಾದಾತ್ಮಕ ಹೇಳಿಕೆ ಪುನರುಚ್ಛಿರಿಸಿದ್ದರು.