ಬೆಂಗಳೂರು: ದೇಶಕ್ಕೆ ಆರು ವರ್ಷಗಳ ಹಿಂದೆಯೇ ಕೋವಿಡ್ ಬಂದಿದೆ ಎಂದು ಮಾಜಿ ಶಾಸಕ ಸಿಎಂ ಇಬ್ರಾಹಿಂ ಅವರು ಬಿಜೆಪಿ ಸರ್ಕಾರವನ್ನು ಲೇವಡಿ ಮಾಡಿದ್ದಾರೆ.
ಇಂದು ಕಾಂಗ್ರೆಸ್ ಪಕ್ಷದಿಂದ ಆರಮನೆ ಮೈದಾನದಲ್ಲಿ ರಾಜ್ಯ ಕಾಂಗ್ರೆಸ್ ನೂತನ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಪಕ್ಷದ ಹಾಲಿ, ಮಾಜಿ ಶಾಸಕರು, ಸಂಸದರು, ಪರಿಷತ್ ಸದಸ್ಯರು, ಲೋಕಸಭೆ, ವಿಧಾನಸಭೆ ಪರಾಜಿತ ಅಭ್ಯರ್ಥಿಗಳು ಪಕ್ಷದ ಜಿಲ್ಲಾಧ್ಯಕ್ಷರು, ಮುಂಚೂಣಿ ಘಟಕಗಳ ಮುಖಂಡರು ಭಾಗಿಯಾಗಿದ್ದಾರೆ. ಪಕ್ಷ ಸಂಘಟನೆ ಕುರಿತು ಸಭೆಯಲ್ಲಿ ಹಿರಿಯರು ಸಲಹೆ ಮತ್ತು ಸೂಚನೆ ನೀಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಸಿಎಂ ಇಬ್ರಾಹಿಂ, ಕೋವಿಡ್ ಮನುಷ್ಯನಿಗೆ ಆರು ತಿಂಗಳ ಹಿಂದೆ ಬಂದಿದೆ. ಆದರೆ ದೇಶಕ್ಕೆ ಆರು ವರ್ಷಗಳ ಹಿಂದೆ ಕೋವಿಡ್ ಬಂದಿದೆ. ಡಿಕೆ ಶಿವಕುಮಾರ್ ಅವರನ್ನು ನಾನು ಅಂಭಿನಂದಿಸುತ್ತೇನೆ. ಕೊರೊನಾ ಸಂದರ್ಭದಲ್ಲಿ ತುಂಬಾ ಓಡಾಡಿ ಕೆಲಸ ಮಾಡುತ್ತಿದ್ದಾರೆ. ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಬಲ ಪಡಿಸಿದರೆ ನಿಜವಾಗಿಯೂ ನಾವು ಅಧಿಕಾರಕ್ಕೆ ಬರುತ್ತೇವೆ. ಡಿಸೆಂಬರ್ ನಲ್ಲಿ ರಾಜಕೀಯದಲ್ಲಿ ಬದಲಾವಣೆ ಆಗುತ್ತೆ ಎಂದು ಭವಿಷ್ಯ ನುಡಿದರು.
ಇದೇ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾಳೆಯ ರೈತರ ಪ್ರತಿಭಟನೆ ಹಾಗೂ ಬಂದ್ಗೆ ಕಾಂಗ್ರೆಸ್ಸಿನ ಬೆಂಬಲ ಇದೆ. ದೇಶಾದ್ಯಂತ ಕಾಂಗ್ರೆಸ್ ಬೆಂಬಲಿಸಿದೆ. ರಾಜ್ಯದಲ್ಲಿ ನಾವು ಬೆಂಬಲಿಸುತ್ತೇವೆ ಎಂದು ತಿಳಿಸಿದರು.
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಕಾಂಗ್ರೆಸ್ಸಿನಲ್ಲಿ ಅತಿರಥ ಮಹಾರಥರು ಇದ್ದಾರೆ ಎಂದು ಬಿಜೆಪಿಯವರು ಹೇಳುತ್ತಾರೆ. ಹೌದು ನಿಜ ನಮ್ಮ ಕಾಂಗ್ರೆಸ್ಸಿನಲ್ಲಿ ಅತಿರಥ ಮಹಾರಾಥರು ಇದ್ದಾರೆ. ಇವರಿಗೆ ಕಣ್ಣು, ಕಿವಿ, ಹೃದಯ ಇದೆ. ಆದರೆ ಬಿಜೆಪಿಯವರಿಗೆ ಇವುಗಳು ಏನ್ ಇಲ್ಲ ಎಂದರು.
ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪರಮೇಶ್ವರ್, ಮುನಿಯಪ್ಪ, ಡಿ.ಕೆ.ಸುರೇಶ್, ಹೆಚ್.ಕೆ.ಪಾಟೀಲ್ ಮತ್ತು ಎಸ್.ಆರ್. ಪಾಟೀಲ್ ಸೇರಿದಂತೆ ಹಿರಿಯರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.