ಮಡಿಕೇರಿ: ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆ ಜೊತೆಗೆ ಮತ್ತೊಂದು ಅಪರೂಪದ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಡಿಕೇರಿ ಅರಣ್ಯ ಪೊಲೀಸರು ಬಂಧಿಸಿದ್ದಾರೆ.
ಅಬ್ದುಲ್ ಹಮೀದ್ ಬಂಧಿತ ಆರೋಪಿ. ಮಡಿಕೇರಿ ತಾಲೂಕಿನ ಎಂ.ಬಾಡಗ ಗ್ರಾಮದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಅಬ್ದುಲ್ ಹಮೀದ್ ಒಂದು ಜೀವಂತ ನಕ್ಷತ್ರ ಆಮೆ ಮತ್ತು ಮತ್ತೊಂದು ಜೀವಂತ ಅಪರೂಪದ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಎನ್ನಲಾಗಿದೆ.
ಖಚಿತ ಮಾಹಿತಿ ಆಧಾರದ ಮೇರೆಗೆ ಎಚ್ಚೆತ್ತುಕೊಂಡ ಮಡಿಕೇರಿ ಅರಣ್ಯ ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಅಲ್ಲದೇ ಎರಡು ಆಮೆಯನ್ನು ರಕ್ಷಣೆ ಮಾಡಲಾಗಿದೆ.
ಈ ಕುರಿತು ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.