ಮೈಸೂರು: ಚಾಮುಂಡಿಬೆಟ್ಟದಲ್ಲಿ ರಥೋತ್ಸವ ಹಿನ್ನೆಲೆಯಲ್ಲಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧವನ್ನು ಹೇರಲಾಗಿದೆ.
ಇಂದು ಸಂಜೆ 6 ಗಂಟೆಯಿಂದ ನಾಳೆ ಮಧ್ಯಾಹ್ನ 12 ಗಂಟೆವರೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸುವಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.
ಅಕ್ಟೋಬರ್ 29ರಂದು ನಡೆಯಲಿರುವ ಚಾಮುಂಡಿ ರಥೋತ್ಸವಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ. ದಸರಾ ಉತ್ಸವಕ್ಕೆ ಗ್ರಾಮಸ್ಥರು ಮತ್ತು ಅಧಿಕಾರಿಗಳಿಗೆ ಮಾತ್ರ ಪ್ರವೇಶ ವಿನಾಯಿತಿ ಇರುತ್ತದೆ. ಜನಸಮೂಹವನ್ನು ಒಳಗೊಂಡಂತೆ ನಡೆಯುತ್ತಿದ್ದ ದಸರಾ ರಥೋತ್ಸವ ಈ ಬಾರಿ ಭಕ್ತರಿಗೆ ಹೆಚ್ಚಿನ ಪ್ರಮಾಣದಲ್ಲಿ ಅವಕಾಶವಿಲ್ಲ. ಸಾಂಪ್ರದಾಯಿಕವಾಗಿ ಸರಳವಾಗಿ ಉತ್ಸವ ನಡೆಯಲಿದೆ.
ಮೈಸೂರು ದಸರಾ ಪ್ರಮುಖ ಆಕರ್ಷಣೆ ಎಂದರೆ ಜಂಬೂ ಸವಾರಿ. ದೇಶ ಮಾತ್ರವಲ್ಲ, ವಿದೇಶಗಳಲ್ಲೂ ಕಣ್ಮನ ಸೆಳೆಯುತ್ತದೆ. ಜಂಬೂ ಸವಾರಿ ಇದೇ ಮೊದಲ ಬಾರಿಗೆ ಇಷ್ಟೊಂದು ಸರಳವಾಗಿ ನಡೆದಿದೆ. ಕೊರೊನಾದಿಂದ ಈ ಬಾರಿ ಮೈಸೂರು ದಸರಾ ಉತ್ಸವ ಸರಳವಾಗಿ ನಡೆದಿದೆ. ದಸರಾ ಹಬ್ಬ ಯಶಸ್ವಿಯಾಗಿ ನಡೆಯಲೆಂದು ರೋಹಿಣಿ ಸಿಂಧೂರಿ ಹರಕೆ ಹೊತ್ತಿದ್ದರು. ಈ ಹಿನ್ನೆಲೆಯಲ್ಲಿ ನವರಾತ್ರಿ ಒಂಬತ್ತನೇ ದಿನ ತಾವೇ ಸ್ವತಃ ರಥ ಎಳೆಯುವ ಮೂಲಕ ಹರಕೆ ತೀರಿಸಿದ್ದರು.