ಬಾಗಲಕೋಟೆ: ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿಯವರ ಒಡೆತನದ ಸಾಯಿ ಪ್ರಿಯಾ ಸಕ್ಕರೆ ಕರ್ಖಾನೆ ಆವರಣದಲ್ಲಿ ಭಾರೀ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಬಳಿ ಇರುವ ಸಾಯಿಪ್ರಿಯಾ ಕರ್ಖಾನೆ ಆವರಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬಯೋ ಗ್ಯಾಸ್ಗೆ ಬೆಂಕಿ ಹತ್ತಿಕೊಂಡಿದೆ. ಬಳಿಕ ಜ್ವಾಲೆಯಾಗಿ ವ್ಯಾಪಕವಾಗಿ ಹಬ್ಬಿಕೊಂಡಿದ್ದು, ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ. ಬಾನೆತ್ತರಕ್ಕೆ ದಟ್ಟ ಹೊಗೆ ಆವರಿಸಿಕೊಂಡಿತ್ತು. ಇದರಿಂದಾಗಿ ಸ್ಥಳೀಯರಲ್ಲಿ ಆತಂಕ ಮೂಡಿತ್ತು.
ಅಗ್ನಿ ಅವಘಡ ಸಂಭವಿಸಲು ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಕಿಡಿಗೇಡಿಗಳ ಕೃತ್ಯವಿತಬೇಕೆಂಬ ಶಂಕೆ ವ್ಯಕ್ತವಾಗಿದೆ. 8 ಅಗ್ನಿಶಾಮಕ ದಳ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು, ಸದ್ಯ ಬೆಂಕಿ ಹತೋಟಿಗೆ ಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.