– ಕೊಡಲಿಯಿಂದ ಕೊಚ್ಚಿ ಕುಟುಂಬದ ಕೊಲೆ
– ನೆರೆಹೊರೆಯವರು ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ
ಚಂಡೀಗಢ: ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮೂವರು ಮಕ್ಕಳನ್ನು ಕೊಲೆ ಮಾಡಿರುವ ಘಟನೆ ಹರಿಯಾಣದ ಮಹೇಂದರ್ಗಢ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿಯನ್ನು ಜಿಲ್ಲೆಯ ನರ್ನಾಲ್ ನಿವಾಸಿ ತುಳಸಿದಾಸ್ ಎಂದು ಗುರುತಿಸಲಾಗಿದೆ. ಪತ್ನಿ ಆರತಿ ಮತ್ತು ತನ್ನ ಮೂವರು ಮಕ್ಕಳಾದ 7 ವರ್ಷದ ಮಗ, 6 ವರ್ಷದ ಮಗ ಹಾಗೂ 4 ವರ್ಷದ ಮಗಳನ್ನು ಸಹ ಕೊಂದಿದ್ದಾನೆ. ತನ್ನ ಕುಟುಂಬವನ್ನು ಕೊಲೆ ಮಾಡಿದ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ತುಳಸಿದಾಸ್ ಆ ಪ್ರದೇಶದಲ್ಲಿ ಗಾರೆ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದನು. ಆದರೆ ತನ್ನ ಕುಟುಂಬವನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ನೆರೆಹೊರೆಯವರು ಯಾರೂ ಮನೆಯಿಂದ ಹೊರಗೆ ಬಾರದಿರುವುದರಿಂದ ಅನುಮಾನಗೊಂಡು ಹೋಗಿ ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ನೆರೆಹೊರೆಯವರು ಮನೆಯ ಬಾಗಿಲು ಮುರಿದು ಒಳಗೆ ಹೋಗಿ ನೋಡಿದ್ದಾರೆ. ಆಗ ಕುಟುಂಬದ ನಾಲ್ವರು ಮೃತಪಟ್ಟಿರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ಪೊಲೀಸ್ ಮನೋಜ್ ಕುಮಾರ್ ತಿಳಿಸಿದ್ದಾರೆ.
ಈ ಘಟನೆಯ ಬಗ್ಗೆ ಮಹಿಳೆಯ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಸದ್ಯಕ್ಕೆ ಆರೋಪಿ ಬಳಸಿದ ಕೊಡಲಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆದರೆ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.