ಬಳ್ಳಾರಿ: ಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯಕ್ ಮೇಲೆ ಪ್ರಕರಣ ದಾಖಲಾಗಿದೆ.
ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರದಲ್ಲಿ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರ ನಾಯಕ್ ಅವರ ಪುತ್ರನ ಮದುವೆಯ ಹಿನ್ನೆಲೆಯಲ್ಲಿ ಕೋವಿಡ್ 19 ಮಾರ್ಗದರ್ಶಿ ನಿಯಮಗಳ ಉಲ್ಲಂಘನೆ ಆಧಾರದ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.

ಮದುವೆಯಲ್ಲಿ ಕಾನೂನು ಉಲ್ಲಂಘನೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಶಾಸಕರು, ನನ್ನ ಮಗನ ಮದುವೆಗೆ ಕಡಿಮೆ ಜನ ಬನ್ನಿ ಎಂದು ಮನವಿ ಮಾಡಿದ್ದೆ. ಆದರೆ ನನ್ನ ಮೇಲಿನ ಪ್ರೀತಿಯಿಂದ ಜನರು ಜಾಸ್ತಿ ಬಂದಿದ್ದಾರೆ. ಹಾಗಂತ ಜನರು ಬರುವುದನ್ನು ತಡೆಯಲು ಸಾಧ್ಯವಾಗುತ್ತಾ ಎಂದು ಪ್ರಶ್ನಿಸಿದ್ದಾರೆ.
ಎಲ್ಲರಿಗೂ ಮಾಸ್ಕ್ ಸ್ಯಾನಿಟೈಜರ್, ಥರ್ಮಲ್ ಸ್ಕಾನಿಂಗ್ ಮಾಡಲು ಹೇಳಿದ್ದೆ. ಆದರೆ ಜನ ಜಾಸ್ತಿಯಾದ ಹಿನ್ನೆಲೆ ಏನು ಮಾಡಲು ಸಾಧ್ಯವಾಗಲಿಲ್ಲ. ಕೋವಿಡ್ ಸಮಯದಲ್ಲಿ ಇಷ್ಟೊಂದು ಜನ ಸೇರಬಾರದು ಎಂದು ಮನವಿ ಮಾಡಿಕೊಂಡಿದ್ದೆ ಎಂದರು.
ಇದೇ ವೇಳೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ಇಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವರು, ನನಗೂ ಪೊಲೀಸರು ನೋಟಿಸ್ ನೀಡಿದ್ದಾರೆ. ನಾನು ಯಾರ ಮೇಲೆ ಏನು ಹೇಳೋಲ್ಲ, ಯಾರ ಮೇಲೂ ಆರೋಪ ಕೂಡ ಮಾಡಲ್ಲ ಎಂದು ಅವರು ತಿಳಿಸಿದರು.




