ಗದಗ: ಆನ್ಲೈನ್ ಕ್ಲಾಸ್ ನೆಪದಲ್ಲಿ ಪಬ್ಜಿ ಆಡುತ್ತಿದ್ದ ಯುವಕನಿಗೆ ಗೇಮ್ ಆಡಬೇಡ ಎಂದು ಬೈದು ಮೊಬೈಲ್ ಕಸಿದುಕೊಂಡಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಹಿರೆಪೇಟೆ ನಿವಾಸಿ ಕಾರ್ತಿಕ್ ಬಬಲಿ(17) ಮನೆಯಲ್ಲಿ ನೇಣು ಬಿಗಿದುಕೊಂಡು ಆಹತ್ಮಹತ್ಯೆ ಮಾಡಿಕೊಂಡಿದ್ದಾನೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಯುವಕ ಪಬ್ಜಿ ಗೇಮ್ಗೆ ದಾಸನಾಗಿದ್ದ. ಆನ್ಲೈನ್ ಕ್ಲಾಸ್ ನೆಪದಲ್ಲಿ ಯಾವಾಗಲೂ ಗೇಮ್ ಆಡುತ್ತಿದ್ದ. ಇದನ್ನು ಗಮನಿಸಿದ ಪಾಲಕರು ಬರೀ ಗೇಮ್ ಆಡುತ್ತೀಯಾ, ಓದು ಎಂದು ಬೈದು ಮೊಬೈಲ್ ಕಸಿದುಕೊಂಡಿದ್ದಾರೆ.
ಸಾಕಷ್ಟು ಬಾರಿ ಕೇಳಿದರೂ ಪೋಷಕರು ಆತನಿಗೆ ಮೊಬೈಲ್ ಕೊಡದ ಹಿನ್ನೆಲೆಯಲ್ಲಿ ಮನನೊಂದು ಯುವಕ ನೇಣಿಗೆ ಶರಣಾಗಿದ್ದಾನೆ. ಇದನ್ನು ನೋಡಿದ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನವಾಗಲಿಲ್ಲ. ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.