ಹುಬ್ಬಳ್ಳಿ: ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರಾಗಿದೆ. ಹುಬ್ಬಳ್ಳಿಯ ಜೆಎಂಎಫ್ಸಿ-2 ನ್ಯಾಯಾಲಯ ಜಾಮೀನಿನ ಮೇಲೆ ಆರೋಪಿಗಳನ್ನು ಬಿಡುಗಡೆ ಮಾಡಿದೆ.
ಪೊಲೀಸರ ನಿರ್ಲಕ್ಷ್ಯ ಹಾಗೂ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳನ್ನು ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ ಎಂದು ಯುವ ವಕೀಲರ ಸಂಘದ ಅಧ್ಯಕ್ಷ ಅಶೋಕ್ ಅಣವೇಕರ ಆರೋಪಿಸಿದ್ದಾರೆ.
ಹುಬ್ಬಳ್ಳಿ ಗ್ರಾಮೀಣ ಪೊಲೀಸರು ನಿಗದಿತ ಸಮಯದಲ್ಲಿ ಚಾರ್ಜ್ ಶೀಟ್ ಸಲ್ಲಿಸದೇ ಇರುವುದರಿಂದ ಮಾನ್ಯ ನ್ಯಾಯಾಲಯ ಆರೋಪಿಗಳಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. 90 ದಿನದಲ್ಲಿ ಚಾರ್ಜ್ ಶೀಟ್ ದಾಖಲಿಸಬೇಕಾದ ಗ್ರಾಮೀಣ ಪೊಲೀಸರು 109 ದಿನಗಳ ನಂತರ ಚಾರ್ಜ್ ಶೀಟ್ ಸಲ್ಲಿಸಿರುವುದರಿಂದ ಆರೋಪಿಗಳು ಜಾಮೀನಿನ ಮೇಲೆ ಹೊರ ಬರುವಂತಾಯಿತು ಎಂದು ದೂರಿದ್ದಾರೆ.
ಈ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸುವುದರಿಂದ ಹಿಡಿದು ಚಾರ್ಜ್ ಶೀಟ್ ಸಲ್ಲಿಸುವವರೆಗೂ ಪೊಲೀಸರು ವೈಫಲ್ಯ ಹಾಗೂ ನಿರ್ಲಕ್ಷ್ಯದಿಂದ ವರ್ತಿಸಿದ್ದು ಉದ್ದೇಶಪೂರ್ವಕವಾಗಿ ಒಂದು ಕಡೆ ಕಾಶ್ಮೀರಿ ವಿದ್ಯಾರ್ಥಿಗಳನ್ನು ರಕ್ಷಿಸುವ ಷಡ್ಯಂತ್ರ ನಡೆಯುತ್ತಿದೆ. ಗೃಹ ಸಚಿವರು ಕರ್ತವ್ಯ ಲೋಪ ಎಸಗಿದ ಪೊಲೀಸರನ್ನು ಅಮಾನತು ಮಾಡಬೇಕು ಎಂದು ಯುವ ವಕೀಲರ ಸಂಘ ಒತ್ತಾಯಿಸಿದೆ.