ಮಂಗಳೂರು: ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನರಿಗೆ ಕೋವಿಡ್ ಲಸಿಕೆಯನ್ನು ಸಂಪೂರ್ಣ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ಎಂದು ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮನವಿ ಮಾಡಿದೆ.
ದೇಶದಲ್ಲಿ ಸದ್ಯ ಪ್ರತಿದಿನ ಕೇವಲ 16 ಲಕ್ಷ ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಈ ವೇಗದಲ್ಲಿ ಲಸಿಕೆ ನೀಡುತ್ತಾ ಹೋದರೆ ಎಲ್ಲರಿಗೂ ಲಸಿಕೆ ದೊರೆಯುವುದು ತುಂಬಾ ವಿಳಂಬ ಆಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡುವ ದಿನದ ಗುರಿಯನ್ನು ಒಂದು ಕೋಟಿಗೆ ನಿಗದಿ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಯವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ. ಇದನ್ನೂ ಓದಿ: ದಿನಕ್ಕೆ ಕೋಟಿ ಜನರಿಗೆ ಕೋವಿಡ್ ಲಸಿಕೆ ಕೊಡಿ: ರಾಜ್ಯಪಾಲರಿಗೆ ಕೈ ನಾಯಕರ ಮನವಿ
ಕಾಂಗ್ರೆಸ್ ನಿಯೋಗದಲ್ಲಿ ಡಿಸಿಸಿ ಅಧ್ಯಕ್ಷರೂ ಆದ ವಿಧಾನಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ.ರಮಾನಾಥ್ ರೈ ಮತ್ತು ಅಭಯಚಂದ್ರ ಜೈನ್, ಶಾಸಕ ಯು.ಟಿ.ಖಾದರ್, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಜೆ.ಆರ್.ಲೋಬೊ, ಮೊಯ್ದೀನ್ ಬಾವ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.
ದೇಶದಲ್ಲಿ ಕಳೆದ ಮೇ 31ರ ವರೆಗೆ 21.31 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಅಂದರೆ ಕೇವಲ 4.45 ಕೋಟಿ ಜನರಿಗೆ ಲಸಿಕೆ ನೀಡಿದಂತಾಗುತ್ತದೆ. ಇದು ಭಾರತದ ಜನಸಂಖ್ಯೆಯ ಕೇವಲ ಶೇ.3.17 ಮಾತ್ರ. ಕಳೆದ 134 ದಿನಗಳಲ್ಲಿ ಪ್ರತಿ ದಿನ ಸರಾಸರಿ ಕೇವಲ 16 ಲಕ್ಷ ಡೋಸ್ ಲಸಿಕೆ ಮಾತ್ರ ನೀಡಲಾಗುತ್ತಿದೆ. ಈ ರೀತಿಯಲ್ಲಿ ಲಸಿಕಾ ಕಾರ್ಯಕ್ರಮ ನಡೆದರೆ ಎಲ್ಲ ವಯಸ್ಕ ಜನರಿಗೆ ಲಸಿಕೆ ನೀಡುವುದು ವಿಳಂಬ ಆಗಲಿದ್ದು, ಮೂರನೇ ಅಲೆಗೆ ಮುನ್ನ ನಮ್ಮ ದೇಶದ ಜನರ ರಕ್ಷಣೆ ಹೇಗೆ ಸಾಧ್ಯ ಎಂದು ನರೇಂದ್ರ ಮೋದಿ ಸರ್ಕಾರ ಉತ್ತರಿಸಬೇಕಾಗಿದೆ ಎಂದು ಕಾಂಗ್ರೆಸ್ ಹರಿಹಾಯ್ದಿದೆ.
ಕೇಂದ್ರ ಸರ್ಕಾರ ಲಸಿಕೆಗಳನ್ನು ಖರೀದಿಸಿ ಉಚಿತವಾಗಿ ರಾಜ್ಯ ಸರ್ಕಾರಗಳಿಗೆ ನೀಡಬೇಕಾಗಿರುವುದು ಇಂದಿನ ಅಗತ್ಯ. ಡಿಸೆಂಬರ್ ಅಂತ್ಯದ ವೇಳೆಗೆ ಹದಿನೆಂಟು ಮತ್ತು ಹೆಚ್ಚಿನ ವಯೋಮಾನದವರಿಗೆ ಉಚಿತ ಲಸಿಕೆ ಹಾಕಬೇಕಾಗುತ್ತದೆ. ಕೇಂದ್ರ ಸರ್ಕಾರ ಮೂರು ರೀತಿಯ ದರ ನಿಗದಿ ಮಾಡಿರುವುದು ನ್ಯಾಯಯುತವಾಗಿಲ್ಲ. ಇಂದು ಖಾಸಗಿ ಆಸ್ಪತ್ರೆಗಳಲ್ಲಿ 600 ರೂ.ನಿಂದ 1,500 ರೂಪಾಯಿ ದರದಲ್ಲಿ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಸಂಕಷ್ಟ ಕಾಲದಲ್ಲಿ ಮೋದಿ ಸರ್ಕಾರ ಕೆಲವು ಮಂದಿಗೆ ಲಾಭ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ಕಾಂಗ್ರೆಸ್ ಮನವಿಯಲ್ಲಿ ಹೇಳಿದೆ.