ಹುಬ್ಬಳ್ಳಿ: ಸೇವಾ ಹೀ ಸಂಘಟನಾ ಎಂಬ ಪರಿಕಲ್ಪನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ವಿಭಿನ್ನವಾಗಿ ಆಚರಿಸಿಲು ರಾಜ್ಯ ಬಿಜೆಪಿ ಘಟಕ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಹೇಶ್ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಕೆ.ಪಿ.ನಡ್ಡಾರವರ ಕರೆಯ ಮೇರೆಗೆ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 02 ರವರೆಗೆ ಸೇವಾ ಸಪ್ತಾಹ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮತ್ತು ಮಹಾತ್ಮಾ ಗಾಂಧಿ ಜಯಂತಿಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 17 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಪಕ್ಷದ ಎಲ್ಲಾ ಕಾರ್ಯಕರ್ತರು ಪ್ರತಿ ವರ್ಷದಂತೆ ಸೇವಾ ಸಪ್ತಾಹದ ಮೂಲಕ ವಿವಿಧ ರೀತಿಯ ಸೇವಾ ಚಟುವಟಿಕೆಗಳ ಮೂಲಕ ಆಚರಿಸಲಾಗುತ್ತಿದೆ ಎಂದರು.
ರಾಷ್ಟ್ರೀಯ ಅಧ್ಯಕ್ಷ ನಡ್ಡಾರವರ ನಿರ್ದೇಶನದಂತೆ ಸೆಪ್ಟಂಬರ್ 14 ರಿಂದ ಸೆಪ್ಟೆಂಬರ್ 20 ರವರೆಗೆ ಪ್ರತಿ ಮಂಡಲಗಳಲ್ಲಿ 70 ದಿವ್ಯಾಂಗ ವ್ಯಕ್ತಿಗಳಿಗೆ ಕೃತಕ ಅಂಗ ಜೋಡಣಾ ಉಪಕರಣಗಳನ್ನು ನೀಡುವುದು. 70 ಬಡ ಪುರುಷರು ಮತ್ತು ಮಹಿಳೆಯರಿಗೆ ಉಚಿತ ಕನ್ನಡಕಗಳನ್ನು ನೀಡುವುದು. ಕೋವಿಡ್ 19 ನಿಯಮಗಳನ್ನು ಪಾಲಿಸಿ ಪ್ರತಿ ಜಿಲ್ಲೆಯ 70 ಆಸ್ಪತ್ರೆ ಮತ್ತು ಬಡ ಕಾಲೋನಿಗಳಲ್ಲಿ ಹಣ್ಣು ಹಂಪಲುಗಳನ್ನು ವಿತರಿಸುವುದು. ಸ್ಥಳೀಯ ಆವಶ್ಯಕತೆ ಅನುಗುಣವಾಗಿ ಆಸ್ಪತ್ರೆಯ ಮೂಲಕ ಕೋವಿಡ್-19 ರಿಂದ ಪೀಡಿತರಾದ 70 ವ್ಯಕ್ತಿಗಳಿಗೆ ಪ್ಲಾಸ್ಮಾ ದಾನ ಮಾಡುವುದು.
ಯುವಮೋರ್ಚಾದ ವತಿಯಿಂದ ರಾಜ್ಯದಲ್ಲಿ 70 ರಕ್ತದಾನ ಶಿಬಿರಗಳನ್ನು ಮಾಡುವುದು. ಪ್ರತಿ ಜಿಲ್ಲೆಗಳಲ್ಲಿ ಕನಿಷ್ಟ 1 ರಕ್ತದಾನ ಶಿಬಿರ ಆಯೋಜಿಸುವುದು. ಪ್ರತಿ ಬೂತ್ನಲ್ಲಿ 70 ವೃಕ್ಷಾರೋಹಣ ಕಾರ್ಯಕ್ರಮ ಮತ್ತು ಪರಿಸರ ಸಂರಕ್ಷಣೆಯ ಸಂಕಲ್ಪ ಕಾರ್ಯಕ್ರಮ. ಪ್ರತಿ ಜಿಲ್ಲೆಗಳ 70 ಹಳ್ಳಿಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸುವುದು. ಪ್ಲಾಸ್ಟಿಕ್ ನಿಷೇಧ ಕುರಿತು ಜನಜಾಗೃತಿ, ಪ್ರತಿ ಜಿಲ್ಲಾ ಕೇಂದ್ರದಲ್ಲಿ 70 ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ನಡೆಸುವುದು ಸೇರಿದಂತೆ ಮುಂತಾದ ಸೇವಾ ಸಪ್ತಾಹ ಕಾರ್ಯಕ್ರಮ ನಡೆಸಲಾಗುವುದು ಎಂದರು.