ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೆ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ನರೇಂದ್ರ ಮೋದಿ ಸರ್ಕಾರ ರಾಜಕೀಯವಾಗಿ ನನ್ನನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಗಲಭೆಗಳ ಮೂಲಕ ರಾಜ್ಯವನ್ನು ಸುಟ್ಟು ಹಾಕಲು ಬಿಜೆಪಿ ಬಯಸಿದೆ. ಜೆಎನ್ಯು ರೀತಿಯ ವಿಶ್ವವಿದ್ಯಾಲಯಗಳು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಮುರಿಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಬಂಗಾಳಕ್ಕೆ ಅಪಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಆಗ ಗಲಭೆಯ ಸಂದರ್ಭದಲ್ಲಿ ಶಾಂತಿ ತರಲು ಗಾಂಧೀಜಿ ಬೆಲಿಯಘಟಕ್ಕೆ ಬಂದಿದ್ದರು ಎಂದು ಹೇಳಿದ್ದಾರೆ.
ನನ್ನನ್ನು ರಾಜಕೀಯವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಅಭಿಜಿತ್ ಬ್ಯಾನರ್ಜಿ ಹಾಗೂ ಅಮತ್ರ್ಯ ಸೇನ್ ಅವರಿಗೆ ಸಮಾಜದಲ್ಲಿ ಭಿನ್ನ ಸ್ಥಾನವಿದೆ. ನಮ್ಮ ಶಿಕ್ಷಣ ತಜ್ಞರನ್ನು ಸಹ ಟಾರ್ಗೆಟ್ ಮಾಡಲಾಗುತ್ತಿದೆ. ಅವರು ಐಸೋಲೇಟ್ ಆಗಿರುವಂತೆ ವರ್ತಿಸುತ್ತಿದ್ದಾರೆ. ಅಲ್ಲದೆ ಇತ್ತೀಚಿನ ವರ್ಷಗಳಲ್ಲಿ ಅವರು ನೇತಾಜಿ ಬಗ್ಗೆ ಮಾತನಾಡುವುದನ್ನು ಬಿಟ್ಟಿದ್ದಾರೆ. ಈಗ ಎಲ್ಲರೂ ಮೋದಿಯವರ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.
ಕೃಷಿ ಕಾನೂನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಮಾತನಾಡಿದ ಅವರು, ನಾನು ರೈತರ ಪರವಾಗಿದ್ದೇನೆ. ಸರ್ಕಾರ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು. ನಾವೆಲ್ಲ ರೈತರ ಜೊತೆ ಇದ್ದೇವೆ. ಮೂರು ಕಾನೂನುಗಳನ್ನು ಕೈಬಿಡುವಂತೆ ನಾವು ಒತ್ತಾಯಿಸುತ್ತೇವೆ ಎಂದು ತಿಳಿಸಿದರು.