ಚಾಮರಾಜನಗರ: ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ ಸರ್ಕಾರ 144 ಸೆಕ್ಷನ್ ಜಾರಿಮಾಡಿ ನಿಷೇಧಾಜ್ಞೆ ಹೊರಡಿಸಿದೆ. ಆದರೆ ಇದು ಜನಸಾಮಾನ್ಯರಿಗೆ ಮಾತ್ರನಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಹುಟ್ಟಿಕೊಂಡಿದೆ. ಇದಕ್ಕೆ ಕಾರಣ ರಾಜ್ಯದ ಹಲವು ಮಂತ್ರಿಗಳು ಕೊರೊನಾ ರೂಲ್ಸ್ ಬ್ರೇಕ್ ಮಾಡಿ ತಮಗೆ ಬೇಕಾದಾಗೆ ಕಾರ್ಯಕ್ರಮ, ಚುನಾವಣೆ ಪ್ರಚಾರದಲ್ಲಿ ನೂರಾರು ಜನರನ್ನು ಸೇರಿಸಿಕೊಂಡು ಓಡಾಡುತ್ತಿದ್ದಾರೆ.
ಚಾಮರಾಜನಗರ ಜಿಲ್ಲೆ ಹನೂರು ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗಾಗಿ ಇಂದು ರಾಜ್ಯದ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಮತ್ತು ಹನೂರು ಶಾಸಕ ಆರ್ ನರೇಂದ್ರ ಅವರು ಆಗಮಿಸಿದ್ದರು. ಈ ವೇಳೆ ಸಚಿವರು ಯಾವುದೇ ಅಂತರ ಕಾಪಾಡದೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೊರೊನಾ ನಿಯಮವನ್ನು ಗಾಳಿಗೆ ತೋರಿದ್ದಾರೆ.
ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಮರೆತ ಜನಪ್ರತಿನಿಧಿಗಳನ್ನು ಕಂಡ ಸಾರ್ವಜನಿಕರು, ಮದುವೆಗೆ 50 ಜನರ ಮಿತಿ ಆದರೆ ಇವರ ಕಾರ್ಯಕ್ರಮದಲ್ಲಿ ಯಾವುದೇ ಮಿತಿಯಿಲ್ಲವೇ? ಸರ್ಕಾರದ ಮಾರ್ಗಸೂಚಿ ಅನ್ವಯ ಈಗ ಎಲ್ಲಾ ಕಡೆ ನಿಷೇಧಾಜ್ಞೆ ಜಾರಿಯಲ್ಲಿದೆ. 144 ನೇ ಸೆಕ್ಷನ್ ಅನ್ವಯ ಜನರು ಗುಂಪುಗೂಡುವಂತಿಲ್ಲ. ಆದರೆ ಇಲ್ಲಿ ಗುಂಪು ಗುಂಪಾಗಿ ಸೇರಿ ಕಾರ್ಯಕ್ರಮ ಮಾಡಿದ್ದಾರೆ. ಹಾಗಾದರೆ ರಾಜ್ಯದಲ್ಲಿ ಜನಸಾಮಾನ್ಯರಿಗೆ ಒಂದು ರೂಲ್ಸ್. ಸಚಿವ, ಶಾಸಕರಿಗೆ ಮತ್ತೊಂದು ರೂಲ್ಸ್ ಇದೆಯಾ ಎಂದು ಪ್ರಶ್ನೆ ಎತ್ತಿದ್ದಾರೆ.
ಬಳ್ಳಾರಿಯಲ್ಲಿ ಇಂದು ಸಚಿವ ಶ್ರೀರಾಮುಲು ಅವರು ಪಾಲಿಕೆ ಚುನಾವಣೆ ಹಿನ್ನೆಲೆ ವಿವಿಧ ವಾರ್ಡ್ಗಳಲ್ಲಿ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಈ ಸಂದರ್ಭ ಪ್ರಚಾರದಲ್ಲಿ ನೂರಾರು ಜನರನ್ನು ಸೇರಿಸಿಕೊಂಡು ಕೊರೊನಾ ನಿಯಮ ಉಲ್ಲಂಘಿಸಿದ್ದಾರೆ. ಹಾಗೆ ನಿನ್ನೆ ರಾಮನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಡಿಸಿಎಂ ಅಶ್ವಥ್ ನಾರಾಯಣ್ ಅವರು ಕೂಡ ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಅವರಿಗೆ ಜನರ ಆರೋಗ್ಯಕ್ಕಿಂತ, ಶಂಕುಸ್ಥಾಪನೆ, ಉದ್ಘಾಟನೆ, ಚುನಾವಣಾ ಪ್ರಚಾರಗಳೇ ಹೆಚ್ಚಾಯ್ತಾ ಎಂದು ಪ್ರಶ್ನಿಸುತ್ತಿದ್ದಾರೆ.