ಬೆಂಗಳೂರು: ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಯ 2021-22 ನೇ ಸಾಲಿನ ಕ್ರಿಯಾ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯ ಸಭೆ ಇಂದು ಅನುಮೋದನೆ ನೀಡಿತು.
ಮಂಡಳಿ ವತಿಯಿಂದ ಕೈಗೊಳ್ಳಲಾಗಿರುವ 134 ಕಾಮಗಾರಿಗಳ ಪೈಕಿ ಈವರೆಗೆ 76 ಕಾಮಗಾರಿಗಳು ಪೂರ್ಣಗೊಂಡಿದ್ದು, 58 ಕಾಮಗಾರಿಗಳು ಬಾಕಿ ಇರುತ್ತವೆ. ಒಟ್ಟು 500 ಕೋಟಿ ರೂ ವೆಚ್ಚದ ಅನುಭವ ಮಂಟಪ ಯೋಜನೆಗೆ ಸರ್ಕಾರ 200 ಕೋಟಿ ರೂ ಹಂಚಿಕೆ ಮಾಡಿದೆ. 101 ಎಕರೆ ಪ್ರದೇಶದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಹನ್ನೊಂದು ಎಕರೆ 25 ಗುಂಟೆ ಉಚಿತವಾಗಿ ಲಭ್ಯವಿದ್ದು, 69 ಎಕರೆ ಭೂಮಿ ಸ್ವಾಧೀನ ಪಡಿಸಿಕೊಳ್ಳಬೇಕಾಗಿದೆ. ಈ ಭೂಮಿಯ ಮಾಲೀಕರು ಹೆಚ್ಚು ಪರಿಹಾರ ಬಯಸಿದ್ದು, ಮಾರುಕಟ್ಟೆ ದರದಲ್ಲಿ ಪರಿಹಾರ ಕೇಳುತ್ತಿದ್ದಾರೆ. ಆದುದರಿಂದ ಭೂಸ್ವಾಧೀನ ಪ್ರಕ್ರಿಯೆಗೆ ತೊಂದರೆಯಾಗಿದೆ. ಪರಸ್ಪರ ಸಂದಾನ ನಡೆಸಿ ರೈತರ ಸಮ್ಮತಿ ಪಡೆದು ಭೂ ಸ್ವಾಧೀನ ಪ್ರಕ್ರಿಯೆ ಜರುಗಿಸುವಂತೆ ಮುಖ್ಯಮಂತ್ರಿಗಳು ಸಲಹೆ ಮಾಡಿದರು. ಈ ವರ್ಷ ಬಜೆಟ್ ನಲ್ಲಿ ಲಭ್ಯವಿರುವ 10 ಕೋಟಿ ರೂ ಸೇರಿಸಿ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಲಾಯಿತು.
ಪ್ರಸ್ತುತ ಲಭ್ಯವಿರುವ ಭೂಮಿಯಲ್ಲಿ ಮಣ್ಣಿನ ಪರೀಕ್ಷೆ ಮತ್ತು ಇತರ ಕಾಮಗಾರಿಗಳು ನಡೆದಿವೆ. ಭೂಸ್ವಾಧೀನ ಪ್ರಕ್ರಿಯೆ ಜೊತೆಜೊತೆಗೆ ಡಿಪಿಆರ್ ಹಾಗೂ ಇತರೆ ಕಾರ್ಯಗಳನ್ನು ಪೂರ್ಣಗೊಳಿಸುವಂತೆ ಸಭೆಯಲ್ಲಿ ಸೂಚಿಸಲಾಯಿತು. ಇದನ್ನೂ ಓದಿ: ಚೀಪ್ ಮೆಂಟಾಲಿಟಿ ಕೆಲಸ ಮಾಡಬೇಡಿ, ನಾನು ಜಗ್ಗಲ್ಲ – ರಾಕ್ಲೈನ್
ಇನ್ನು ಮುಂದೆ ಬಸವಕಲ್ಯಾಣ ಸಭೆಗೆ ಬೀದರ್ ಜಿಲ್ಲೆಯ ಜಿಲ್ಲಾ ಶಾಸಕರನ್ನು ಆಹ್ವಾನಿಸುವಂತೆ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಅವರು ನೀಡಿದ ಸಲಹೆಗೆ ಮುಖ್ಯಮಂತ್ರಿಗಳು ಸಮ್ಮತಿ ವ್ಯಕ್ತಪಡಿಸಿದರು. ರೈತರ ಒಪ್ಪಿಗೆ ಮೇರೆಗೆ ಭೂಸ್ವಾಧೀನ ಪಡಿಸಿಕೊಳ್ಳವ ಸಂಬಂಧ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದಲ್ಲಿ ಸಭೆಯೊಂದನ್ನು ಆಯೋಜಿಸಲು ತೀರ್ಮಾನಿಸಲಾಯಿತು. ಇದನ್ನೂ ಓದಿ: ಭರವಸೆ ಮೂಡಿಸಿದ ಹೈಕೋರ್ಟ್ ತೀರ್ಪು: ಸುರೇಶ್ ಕುಮಾರ್