ಚಿಕ್ಕಮಗಳೂರು: ಬಹುಶಃ ನನಗೆ ಅನ್ನಿಸೋದು ಬೆಂಗಳೂರು ಗಲಭೆಯ ಪ್ರೊಡ್ಯೂಸರ್ ಹಾಗೂ ಡೈರಕ್ಟರ್ ಜಮೀರ್ ಅಹಮದ್ ಅವರೇ ಇರಬೇಕು. ಅವರೇ ಪ್ರೊಡ್ಯೂಸರ್-ಡೈರಕ್ಟರ್ ಆಗಿದ್ರೆ ನಟರು ಯಾರೆಂದು ಗೊತ್ತೇ ಗೊತ್ತಿರುತ್ತೆ ಅದನ್ನು ಸ್ಪಷ್ಟಪಡಿಸಲಿ ಎಂದು ಹೇಳಿದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಜಮೀರ್ ಅಹಮದ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಜಮೀರ್ ಅಹಮದ್ ಗೋಲಿಬಾರ್ ನಲ್ಲಿ ಮೃತರಾದವರ ಮನೆಗೆ ಹೋಗಿ ಚೆಕ್ ನೀಡಿ ಬಂದಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿ.ಟಿ.ರವಿ, ಬಹುಶಃ ನನಗೆ ಅನ್ನಿಸೋದು ಬೆಂಗಳೂರು ಗಲಭೆಯ ಪ್ರೊಡ್ಯೂಸರ್ ಹಾಗೂ ಡೈರಕ್ಟರ್ ಜಮೀರ್ ಅಹಮದ್ ಅವರೇ ಇರಬೇಕು ಎಂದು ಕಿಡಿಕಾರಿದ್ದಾರೆ. ಈಗ ಜಮೀರ್ ಅಹಮದ್ ಎಲ್ಲ ಜಿಪಿಎ ತೆಗೆದುಕೊಂಡಿರುವುದರಿಂದ ಏನ್ ನಷ್ಟ ಆಗಿದೆ ಅದನ್ನು ಜಮೀರ್ ಅಹಮದ್ರಿಂದ ವಸೂಲಿ ಕ್ರಮ ತೆಗೆದುಕೊಳ್ಳೋಣ ಎಂದರು.
ನೀವು ಸಹಾಯ ಮಾಡುವುದು ಮಾನವೀಯ ಧರ್ಮ ಇರಬಹುದು. ಯಾವ ಸಂದರ್ಭದಲ್ಲಿ ಸಹಾಯ ಮಾಡ್ತಿದ್ದೀರಾ, ಯಾರಿಗೆ ಸಹಾಯ ಮಾಡ್ತಿದ್ದೀರಾ ಎಂಬುದು ಮುಖ್ಯವಾಗುತ್ತೆ. ಅದು ಕೊಡುವ ಮೆಸೇಜ್ ಮಾನವೀಯ ಮೆಸೇಜ್ ಕೊಡುವುದಿಲ್ಲ. ಯಾರು ಏನೇ ಮಾಡಿದರು, ನಾನು ನಿಮ್ಮ ಜೊತೆ ಇದ್ದೀನಿ ಎಂಬ ಮೇಸೆಜ್ ಕೊಡುತ್ತೆ. ಇದರ ಬಗ್ಗೆ ಅವರ ಪಕ್ಷ ಯೋಚಿಸಬೇಕು ಎಂದರು. ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದವರು ಜೈಲಿನಿಂದ ಬಂದರೆ ಅವರಿಗೆ ಹಾರ ಹಾಕಿ ಸನ್ಮಾನ ಮಾಡುತ್ತಾರೆ. ಅವರಿಗೆ ಪ್ರಚೋದಿಸುವ ಕೆಲಸವನ್ನು ಜಮೀರ್ ಮಾಡುತ್ತಿದ್ದಾರೆ ಎಂದರು.
ಗೋಲಿಬಾರ್ ನಲ್ಲಿ ಸತ್ತವರು ಅಮಾಯಕರಲ್ಲ. ಅಮಾಯಕರಾಗಿದ್ದರೆ ಮನೆಯಲ್ಲಿ ಮಲಗಿರೋರು. 300ಕ್ಕೂ ಹೆಚ್ಚು ವಾಹನ ಸುಟ್ಟಿದ್ದಾರೆ. ಆ ವಾಹನ ಸುಟ್ಟವರು ಯಾರು ಹೇಳಲಿ ಹಾಗಾದರೆ. ಇವರು ಅಮಾಯಕರಾದರೆ ಆ ಕಿರಾತಕರು ಯಾರು. ಜಮೀರ್ ಅಹಮದ್ ಖಾನ್ಗೆ ಚೆನ್ನಾಗಿ ಗೊತ್ತಿರುತ್ತೆ ಎಂದಿದ್ದಾರೆ. ನಷ್ಟ ವಸೂಲಿ ಕೆಲಸ ಆಗಲೇಬೇಕು. ಈಗಿನ ಕಾಂಗ್ರೆಸ್ ಒಳ ರಾಜಕಾರಣ ನೋಡಿದರೆ ಅವರು ಪ್ರೊಡ್ಯೂಸರ್-ಡೈರಕ್ಟರ್ ಆಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸದರು.
ಬೆಂಗಳೂರು ಗಲಭೆಯನ್ನು ಲೀಡ್ ಮಾಡಿರೋದು ಎಸ್.ಡಿ.ಪಿ.ಐ. ಅದರಲ್ಲಿ ನಟನೆ ಮಾಡಿ 300ಕ್ಕೂ ಹೆಚ್ಚು ವಾಹನ ಸುಟ್ಟಿರೋರು ಈ ಜನ. ಅವರಿಗೆ ಗೊತ್ತಿರುತ್ತೆ ಸ್ಪಷ್ಟಪಡಿಸಲಿ ಎಂದಿದ್ದಾರೆ. ನಾನು ಆರಂಭದಿಂದ ಹೇಳಿದ್ದೇನೆ. ಕಾಂಗ್ರೆಸ್ ತೊಟ್ಟಿಲನ್ನು ತೂಗಿ ಮಗುವನ್ನು ಚಿವುಟೋ ಕೆಲಸ ಮಾಡುತ್ತಿದೆ. ಜಮೀರ್ ಅಹಮದ್ ಮಾಡುತ್ತಿರುವುದು ಅದನ್ನೇ ಎಂದು ಕಾಂಗ್ರೆಸ್ ಹಾಗೂ ಜಮೀರ್ ಅಹಮದ್ ವಿರುದ್ಧ ಕಿಡಿಕಾರಿದ್ದಾರೆ.