ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಎಲ್ಲರ ನಿರೀಕ್ಷೆಗಳನ್ನು ಹುಸಿಯಾಗಿಸಿದೆ. ಪ್ರಧಾನಿ ಅವರ ಭಾಷಣ ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿಗಳ ಭಾಷಣ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು ಅನ್ನಭಾಗ್ಯ ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ.
ಟ್ವೀಟ್ ಏಟು: ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ ಪ್ರಧಾನಿ ಅವರ ಭಾಷಣಗಳು. ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ ತತ್ತರಕ್ಕೀಡಾಗಿರುವ ಜನರಲ್ಲಿ ಆತ್ಮವಿಶ್ವಾಸ ತುಂಬುವ ಯಾವ ನಿರ್ದಿಷ್ಠ ಯೋಜನೆಗಳ ಪ್ರಸ್ತಾವಗಳೇ ಇಲ್ಲದ ಪ್ರಧಾನಿ ಭಾಷಣ ಕೈಲಾಗದ ನಾಯಕನ ಗೋಳಾಟದಂತಿತ್ತು.
ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವ ಗರೀಬ್ ಕಲ್ಯಾಣ ಯೋಜನೆ ನವಂಬರ್ವರೆಗೆ ಮುಂದುವರಿಸಿರುವುದು ಸ್ವಾಗತಾರ್ಹ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾಗಾಂಧಿಯವರು ತಿಂಗಳ ಹಿಂದೆಯೇ ಈ ಬೇಡಿಕೆ ಇಟ್ಟಿದ್ದರು. ಅದನ್ನು ಒಪ್ಪಿಕೊಂಡದ್ದಕ್ಕೆ ಧನ್ಯವಾದಗಳು. ಕೊರೊನಾ ಸೋಂಕಿನ ತೀವ್ರತೆ ನೋಡಿದರೆ ಇದು 2-3 ತಿಂಗಳೊಳಗೆ ಕೊನೆಗೊಳ್ಳುವಂತಹದ್ದಲ್ಲ. ದೇಶದಲ್ಲಿ ಹಸಿವಿನ ಸಮಸ್ಯೆ ಇನ್ನಷ್ಟು ಭೀಕರವಾಗಲಿದೆ. ಆದ್ದರಿಂದ ನಾವು ಜಾರಿಗೊಳಿಸಿದ್ದ ಅನ್ನಭಾಗ್ಯ ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಬೇಕೆಂದು ಪ್ರಧಾನಿ ಅವರನ್ನು ಒತ್ತಾಯಿಸುತ್ತೇನೆ.
ಆಸ್ಪತ್ರೆಗಳು ತುಂಬಿಹೋಗಿವೆ, ಆಮ್ಲಜನಕ ಪೂರೈಕೆ ವ್ಯವಸ್ಥೆ, ವೆಂಟಿಲೇಟರ್ಗಳ ತೀವ್ರ ಕೊರತೆ ಇದೆ. ದುಬಾರಿ ಚಿಕಿತ್ಸೆ ವೆಚ್ಚದಿಂದಾಗಿ ಕೊರೊನಾ ಸೋಂಕಿಗಿಂತ ಕೊರೊನಾ ಚಿಕಿತ್ಸೆಗೆ ಜನ ಹೆದರುವಂತಾಗಿದೆ. ಈ ಬಗ್ಗೆ ರಾಜ್ಯಗಳಿಗೆ ಕೇಂದ್ರ ನೆರವು ಘೋಷಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಪಿಎಂ ಕೇರ್ಸ್ ನಿಧಿಗೆ ನೆರವಾಗಲು ದೇಶದ ಜನರನ್ನು ವಿನಂತಿಸಿದ್ದ ಪ್ರಧಾನಿಗಳು ಅದರ ಖರ್ಚು-ವೆಚ್ಚದ ವಿವರವನ್ನು ದೇಶದ ಮುಂದಿಟ್ಟು ಪಾರದರ್ಶಕವಾಗಿ ನಡೆದುಕೊಳ್ಳಬಹುದೆಂಬ ನಿರೀಕ್ಷೆಯೂ ಹುಸಿಯಾಗಿದೆ. ಇದಕ್ಕೆ ಚೀನಾದಿಂದಲೂ ದೇಣಿಗೆ ಪಡೆಯಲಾಗಿದೆ ಎಂಬ ಆರೋಪಗಳಿವೆ. ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕಿತ್ತು.
ಸತತ 23ನೇ ದಿನ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿದ್ದು, ಆಹಾರಧಾನ್ಯ, ತರಕಾರಿ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆಯೂ ಏರುತ್ತಿದೆ. ಈ ತೈಲಬೆಲೆ ಇನ್ನೆಷ್ಟು ದಿನಗಳ ಕಾಲ ಏರಲಿದೆ ಎಂದಾದರೂ ಹೇಳಿಬಿಟ್ಟಿದ್ದರೆ ಜನ ಕೆಟ್ಟ ದಿನಗಳಿಗೆ ಹೊಂದಿಕೊಳ್ಳಲು ಸಿದ್ದವಾಗುತ್ತಿದ್ದರು. ಹುತಾತ್ಮ 20 ವೀರಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಘೋಷಿಸಿದ್ದ ಪ್ರಧಾನಿ ಮೋದಿ ಅವರು ಇದಕ್ಕಾಗಿ ಏನು ಮಾಡಿದ್ದಾರೆ ಎನ್ನುವುದನ್ನು ತಿಳಿಸಿದ್ದರೆ ನೊಂದ ದೇಶದ ಜನತೆ ಮತ್ತು ದು:ಖತಪ್ತ ವೀರಯೋಧರ ಕುಟುಂಬಕ್ಕೆ ಸಾಂತ್ವನ ಮಾಡಿದ ಹಾಗಾಗುತ್ತಿತ್ತು.
ಹುತಾತ್ಮ 20 ವೀರಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಘೋಷಿಸಿದ್ದ @PMOIndia ಇದಕ್ಕಾಗಿ ಏನು ಮಾಡಿದ್ದಾರೆ ಎನ್ನುವುದನ್ನು ತಿಳಿಸಿದ್ದರೆ ನೊಂದ ದೇಶದ ಜನತೆ ಮತ್ತು ದು:ಖತಪ್ತ ವೀರಯೋಧರ ಕುಟುಂಬಕ್ಕೆ ಸಾಂತ್ವನ ಮಾಡಿದ ಹಾಗಾಗುತ್ತಿತ್ತು.
7/7#StopBhashanTakeAction
— Siddaramaiah (@siddaramaiah) June 30, 2020