ಹಾಸನ: ಬಿಎಂಟಿಸಿ ಚಾಲಕರೊಬ್ಬರಿಗೆ ಹಾಸನದಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನಾಗಿದ್ದ ವ್ಯಕ್ತಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂನ್ 14ರಂದು ರಜೆ ಹಾಕಿ ಅರಸೀಕೆರೆ ತಾಲೂಕಿನ ಸ್ವಗ್ರಾಮಕ್ಕೆ ಬಂದಿದ್ದರು. ಸ್ವಗ್ರಾಮಕ್ಕೆ ಆಗಮಿಸಿದ ಕೂಡಲೇ ಮೂರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಸಹ ಪಡೆದುಕೊಂಡಿದ್ದರು. ಡ್ರೈವರ್ ಗುಣಮುಖವಾಗದ ಹಿನ್ನೆಲೆಯಲ್ಲಿ ಅವರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಚಾಲಕನಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ.
ಸೋಂಕು ತಗುಲಿರೋದು ದೃಢಪಡುತ್ತಿದ್ದಂತೆ ಚಾಲಕ ವಾಸವಾಗಿದ್ದ ಗ್ರಾಮವನ್ನು ಸೀಲ್ಡೌನ್ ಮಾಡಲಾಗಿದೆ. ಬಿಎಂಟಿಸಿ ಡ್ರೈವರ್ ಕರ್ತವ್ಯ ನಿರ್ವಹಿಸಿದ ಸ್ಥಳ, ಅವರು ಯಾರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿ ಇದ್ದರು ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.