– ಸುಮಲತಾ, ಪ್ರತಾಪ್ ಸಿಂಹ ನಡುವಿನ ಕೆಸರೆರೆಚಾಟಕ್ಕೆ ನಾನು ಮಧ್ಯಬರಲ್ಲ
ಮಂಡ್ಯ: ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಹಕರಿಸಿದ ಸಿಎಂ ಬಿಎಸ್ವೈಗೆ ಧನ್ಯವಾದ ಎಂದು ಮಾಜಿ ಸಿಎಂ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರು ಹೇಳಿದ್ದಾರೆ.
ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ತೆರೆ ಬಿದ್ದಿದೆ. ಆಡಳಿತರೂಢ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯೊಂದಿಗೆ ಅಧಿಕಾರದ ಗದ್ದುಗೆ ಏರುವಲ್ಲಿ ಯಶಸ್ವಿಯಾಗಿವೆ. ಅದರಂತೆ ಬಿಜೆಪಿಯ ಸಿ.ಪಿ.ಅಶೋಕ್ ಅಧ್ಯಕ್ಷರಾಗಿ ಆಯ್ಕೆಯಾದರೆ, ಜೆಡಿಎಸ್ ಬೆಂಬಲಿತ ಅಶೋಕ್ ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರ ತಳ್ಳಿವೆ.
ಈ ವಿಚಾರವಾಗಿ ಇಂದು ಮಾಧ್ಯಮಗಳ ಜೊತೆ ಮಾತನಾಡಿರುವ ನಿಖಿಲ್, ಮೈತ್ರಿಕೂಟದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಭಿನಂದನೆ. ಶಾಸಕ ಸಿಎಸ್ ಪುಟ್ಟರಾಜು ನೇತೃತ್ವದಲ್ಲಿ ಈ ಗೆಲುವು ಸಿಕ್ಕಿದೆ. ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಹಕರಿಸಿದ ಸಿಎಂ ಬಿಎಸ್ವೈಗೆ ಧನ್ಯವಾದ. ಮಂಡ್ಯದ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಸಂಸದರಾದ ಸುಮಲತಾ ಮತ್ತು ಪ್ರತಾಪ್ ಸಿಂಹ ನಡುವಿನ ಕೆಸರೆರೆಚಾಟದಲ್ಲಿ ನಾನು ಮಧ್ಯಬರಲ್ಲ ಎಂದು ಹೇಳಿದ್ದಾರೆ. ಮಂಡ್ಯದ ರಾಜಕೀಯದಲ್ಲಿ ಸದ್ಯ ಸಕ್ರಿಯವಾಗಿ ಇರುವ ನಿಖಿಲ್, ಇಂದು ಮಂಡ್ಯಕ್ಕೆ ಬಂದು ನೂತನ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದವರಿಗೆ ಅಭಿನಂದಿಸಿದರು. ನಂತರ ಜಿಲ್ಲಾ ಕಾಂಗ್ರೆಸ್ ಖಜಾಂಚಿ ಅಮರಾವತಿ ಚಂದ್ರಶೇಖರ್ ಅವರ ನಿವಾಸಕ್ಕೆ ಭೇಟಿ ಕೊಟ್ಟರು.