ಪಾಟ್ನಾ: ಬಿಹಾರದಲ್ಲಿ ಸಿಡಿಲು ಬಡಿದು ಸಾವನ್ನಪ್ಪಿದ 83 ಜನರ ಕುಟುಂಬಗಳಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಪರಿಹಾರ ಘೋಷಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಗುಡುಗು, ಸಿಡಿಲು ಸಹಿತ ಭಾರೀ ಮಳೆಗೆ ಬಿಹಾರದಲ್ಲಿ ಅಪಾರ ಸಾವು ನೋವು ಸಂಭವಿಸಿದ್ದು, ಗುರುವಾರ ಒಂದೇ ದಿನ ಸುಮಾರು 83 ಜನ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರವನ್ನು ಸಿಎಂ ನಿತೀಶ್ ಕುಮಾರ್ ಇಂದು ಘೋಷಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಹ ಈ ಕುರಿತು ಸಂತಾಪ ಸೂಚಿಸಿದ್ದು, ಸರ್ಕಾರ ಪರಿಹಾರ ಕಾರ್ಯದಲ್ಲಿ ತೊಡಗಿದೆ ಎಂದು ತಿಳಿಸಿದ್ದಾರೆ. ಬಿಹಾರ ಹಾಗೂ ಉತ್ತರ ಪ್ರದೇಶದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಗುಡುಗು, ಸಿಡಿಲಿಗೆ ಹಲವು ಜನ ಸಾವನ್ನಪ್ಪಿರುವ ಸುದ್ದಿ ನನ್ನ ಗಮನಕ್ಕೆ ಬಂದಿದೆ. ರಾಜ್ಯ ಸರ್ಕಾರಗಳು ಪರಿಹಾರ ಕಾರ್ಯದಲ್ಲಿ ತೊಡಗಿವೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ ಎಂದು ತಿಳಿಸಿದ್ದಾರೆ.
ಗೋಪಾಲ್ಗಂಜ್ ಜಿಲ್ಲೆಯೊಂದರಲ್ಲೇ 13ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಮಾಹಿತಿ ನೀಡಿದೆ. ಅಲ್ಲದೆ ಕಳೆದ 24 ಗಂಟೆಗಳಲ್ಲಿ ಬಿಹಾರದ ಹಲವು ಭಾಗಗಳಲ್ಲಿ 83ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಹೊಲಗಳಲ್ಲಿ ಕೆಲಸ ಮಾಡುತ್ತಿರುವಾಗ ಬಹುತೇಕರು ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.