ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯಾವುದೇ ಲಾಕ್ಡೌನ್ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಸಂಪುಟ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸೋಂಕು ದೃಢಪಟ್ಟ ಕೂಡಲೇ ಅವರನ್ನು ಆರರಿಂದ ಏಳು ಗಂಟೆವರೆಗೆ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಲಾಗುವುದು. ಹಾಗೆಯೇ ಹೆಚ್ಚುವರಿ 100 ಅಂಬುಲೆನ್ಸ್ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಉಳಿದಂತೆ ಮೆಡಿಕಲ್ ಕಾಲೇಜುಗಳಲ್ಲಿ ಸುಮಾರು 10 ಸಾವಿರ ಬೆಡ್ ಗಳಿರುವ ಬಗ್ಗೆ ಮಾಹಿತಿ ಇದೆ. ಆಸ್ಪತ್ರೆಗಳ ಜೊತೆ ಮಾತನಾಡಿ 5 ಸಾವಿರ ಬೆಡ್ ಪಡೆಯಲಾಗುತ್ತದೆ. ಕೆಲ ವೈದ್ಯಕೀಯ ಕಾಲೇಜುಗಳು ಈಗಾಗಲೇ ಬೆಡ್ ಗಳನ್ನು ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಸೋಂಕಿತರ ಪೈಕಿ ಶೇ.61ರಷ್ಟು ಜನ ಗುಣಮುಖರಾಗುತ್ತಿದ್ದು, ರಾಜ್ಯದಲ್ಲಿ ಕೇವಲ 3,700 ಸಕ್ರಿಯ ಪ್ರಕರಣಗಳಿವೆ. ನಾಳೆಯ ಮಧ್ಯಾಹ್ನ ಬೆಂಗಳೂರಿನ ಎಲ್ಲ ಲೋಕಸಭಾ ಕ್ಷೇತ್ರಗಳ ಸಂಸದರು ಮತ್ತು ವಿಧಾನಸಭಾ ಕ್ಷೇತ್ರಗಳ ಶಾಸಕರೊಂದಿಗೆ ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದಾರೆ. ಬೆಂಗಳೂರಿನ 6 ವಾರ್ಡ್ ಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರೋ ಹಿನ್ನೆಲೆಯಲ್ಲಿ ಅಲ್ಲಿ ಸೀಲ್ಡೌನ್ ಮಾಡಲಾಗಿದೆ ಎಂದು ಆರ್.ಅಶೋಕ್ ಮಾಹಿತಿ ನೀಡಿದರು.