ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 17 ರಂದು ಉಪಚುನಾವಣೆ ನಡೆಯಲಿದೆ.
ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕವನ್ನು ಪ್ರಕಟಿಸಿದೆ. ಮೂರು ಕ್ಷೇತ್ರಗಳ ಮತದಾನ ಮೇ 2 ರಂದು ನಡೆಯಲಿದೆ. ಮಾರ್ಚ್ 30 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 4 ನಾಮಪತ್ರ ಹಿಂತೆಗೆತಕ್ಕೆ ಕೊನೆಯ ದಿನವಾಗಿದೆ.
ಬೆಳಗಾವಿ ಲೋಕಸಭಾ ಸದಸ್ಯರಾಗಿದ್ದ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಕೊರೊನಾದಿಂದ ಮೃತಪಟ್ಟಿದ್ದರಿಂದ ಕ್ಷೇತ್ರ ತೆರವಾಗಿತ್ತು.
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ಅವರು ಕೋವಿಡ್ ಹಾಗೂ ಬಹುಅಂಗಾಂಗ ವೈಫಲ್ಯದಿಂದ 2020ರ ಸೆಪ್ಟೆಂಬರ್ 24 ರಂದು ನಿಧನರಾಗಿದ್ದರು.
ಮಸ್ಕಿಗೆ ಯಾಕೆ?
ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕ ಪ್ರತಾಪಗೌಡ ಪಾಟೀಲ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆದರೆ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಹೈಕೋರ್ಟ್ನಲ್ಲಿ ಪ್ರತಾಪಗೌಡ ಬಿಜೆಪಿಗೆ ಸೇರ್ಪಡೆಯಾಗುವ ಮೊದಲೇ ತಕರಾರು ಅರ್ಜಿ ಸಲ್ಲಿಸಿದ್ದರು.
ಕಾಂಗ್ರೆಸ್ ಅಭ್ಯರ್ಥಿ ಪ್ರತಾಪಗೌಡ ಪಾಟೀಲ 218 ಮತಗಳ ಅಂತರದಿಂದ ಗೆದ್ದಿದ್ದಾರೆ. ಪ್ರತಾಪಗೌಡ ಪಾಟೀಲ ಅವರ ಪುತ್ರಿ ಅಮೆರಿಕದಲ್ಲಿದ್ದರೂ ಅವರ ಹೆಸರಿನಲ್ಲಿ ಮತ್ತು ಮರಣ ಹೊಂದಿದವರ ಹೆಸರಿನಲ್ಲಿ ಮತದಾನವಾಗಿವೆ. ಒಬ್ಬ ಮತದಾರನ ಹೆಸರಿನಲ್ಲಿ ಹಲವು ಮತಗಳನ್ನು ಹಾಕಲಾಗಿದೆ. ಈ ಫಲಿತಾಂಶ ರದ್ದುಪಡಿಸಬೇಕು ಎಂದು ಆರೋಪಿಸಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಬಸನಗೌಡ ತುರ್ವಿಹಾಳ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಾಪಸ್ ಪಡೆದ ಹಿನ್ನೆಲೆಯಲ್ಲಿ ಈಗ ಉಪಚುನಾವಣಾ ದಿನಾಂಕ ಪ್ರಕಟವಾಗಿದೆ.